ಚಿಕ್ಕಮಗಳೂರು: ‘ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗಳಾಗಿರುವ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಹಾಗೂ ಸಂಸದ ಪ್ರಜ್ವಲ್ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಮುಖಂಡರು ಹಾಗೂ ಕಾರ್ಯಕರ್ತೆಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ತಾಲ್ಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದವರೆಗೂ ಮೆರವಣಿಗೆ ನಡೆಸಿದರು. ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಮಾತನಾಡಿ, ‘ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬದಲ್ಲಿಯೇ ಮಗ ಮತ್ತು ಮೊಮ್ಮಗ ಸೇರಿ ಮನೆ ಕೆಲಸದಾಕೆ ಸೇರಿದಂತೆ ನೂರಾರು ಅಮಾಯಕ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಹೀನ ಕೃತ್ಯ ಎಸಗಿದ್ದಾರೆ. ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಿ, ನಾಡಿನ ಹೆಣ್ಣು ಮಕ್ಕಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದರು.
ರಾಜಕೀಯ ಪ್ರಭಾವದಿಂದ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ನೊಂದ ಸಂತ್ರಸ್ತರಿಗೆ ನೈತಿಕವಾಗಿ ಧೈರ್ಯ ತುಂಬಿ ನ್ಯಾಯ ದೊರಕಿಸಿಕೊಡಬೇಕು ಎಂದರು.
ಮುಖಂಡರಾದ ಗಾಯತ್ರಿ ಶಾಂತೇಗೌಡ ಮಾತನಾಡಿ, ‘ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದರು. ಈಗ ಬಡ ಹೆಣ್ಣು ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ಅವರ ಕುಟುಂಬದವರೇ ದಾರಿ ತಪ್ಪಿದ್ದಾರೆ. ಇದು ನಾಗರಿಕ ಸಮಾಜವೇ ತಲೆತಗ್ಗಿಸುವ ಸಂಗತಿ. ಇಂತಹ ವಿಕೃತ ಮನಸ್ಸಿನವರಿಗೆ ಉಗ್ರ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಶಬಾನ ಸುಲ್ತಾನ ಮಾತನಾಡಿ, ‘ನಾಡಿನ ಹೆಣ್ಣು ಮಕ್ಕಳನ್ನು ನೀಚ ಕೃತ್ಯಕ್ಕೆ ಬಳಸಿಕೊಂಡಿರುವ ರೇವಣ್ಣ, ಪ್ರಜ್ವಲ್ ಕುಟುಂಬಕ್ಕೆ ಜನರೇ ತಕ್ಕ ಪಾಠ ಕಲಿಸಬೇಕು. ಅನಾಗರಿಕ ವ್ಯಕ್ತಿತ್ವ ಹೊಂದಿರುವ ಇವರನ್ನು ಬಂಧಿಬೇಕು’ ಎಂದರು.
ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಶೀಲಾ, ಹೇಮಾವತಿ, ಇಂದಿರಾ ಶಂಕರ್, ಯಶೋದಾ ಮಲ್ಲಿಕಾ ಪಾಲ್ಗೊಂಡಿದ್ದರು.