ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಕೆ.ದಾಸರಹಳ್ಳಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬನಿಗೆ (ಪಿ–6120) ಕೋವಿಡ್ ಗುರುವಾರ ದೃಢಪಟ್ಟಿದೆ.
ವಿದ್ಯಾರ್ಥಿಯನ್ನು ಚಿಕ್ಕಮಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಪ್ರವಾಸ ಮಾಹಿತಿ ಕಲೆ ಹಾಕಲಾಗುತ್ತಿದೆ.
‘ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 55 ಮಂದಿಯ ಗಂಟಲಿನ ದ್ರವ, ಮೂಗಿನ ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್ ಪತ್ತೆಯಾಗಿದ್ದ 16 ಮಂದಿ ಗುಣಮುಖರಾಗಿದ್ದರು. ಇವರೆಲ್ಲರೂ ಹೊರರಾಜ್ಯಗಳಿಂದ ಜಿಲ್ಲೆಗೆ ಬಂದವರು. ಇದೇ 6ರಂದು ಸೋಂಕಿತರ ಸಂಖ್ಯೆ ಶೂನ್ಯಕ್ಕೆ ಇಳಿದಿತ್ತು. ಗುರುವಾರ ಹೊಸ ಪ್ರಕರಣ ಪತ್ತೆಯಾಗಿದೆ.