ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳದಮನೆ, ಕೆಸವೆ, ಹಳೇದಾನಿವಾಸದ ಮೂಲಕ ಗೇರುಬೈಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಈ ಗ್ರಾಮಗಳ ವ್ಯಾಪ್ತಿಯಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ವಾಸವಿದ್ದಾರೆ. ಮಾಜಿ ಸಚಿವರಾಗಿದ್ದ ಎಚ್.ಜಿ.ಗೋವಿಂದೇಗೌಡರ ಕಾಲದಲ್ಲಿ ಈ ಗ್ರಾಮಕ್ಕೆ ಡಾಂಬರು ರಸ್ತೆ ನಿರ್ಮಿಸಲಾಗಿತ್ತು. ಸದ್ಯ ರಸ್ತೆಗೆ ಹಾಕಿದ್ದ ಡಾಂಬರು, ಜಲ್ಲಿ ಕಿತ್ತುಹೋಗಿದ್ದು ಸಂಪೂರ್ಣ ಮಣ್ಣಿನ ರಸ್ತೆಯಾಗಿ ಮಾರ್ಪಟ್ಟಿದೆ. ಮಳೆಯಾದಾಗ ರಸ್ತೆ ಕೆಸರುಗದ್ದೆಯಾಗುತ್ತದೆ. ಇಲ್ಲಿ ವಾಹನ, ಜನರು ಹೋಗುವುದು ದುಸ್ತರವಾಗಿದೆ. ನಡೆದುಕೊಂಡು ಹೋದರೆ ಬಟ್ಟೆಯಲ್ಲ ಕೆಸರುಮಯವಾಗುತ್ತದೆ ಎನ್ನುತ್ತಾರೆ ಗ್ರಾಮಸ್ಥರು.