ಚಿಕ್ಕಮಗಳೂರು: ‘ಮಾದಕ ದ್ರವ್ಯ ವ್ಯಸನದಿಂದಾಗಿ ಯುವಜನತೆ ದೂರವಿರಬೇಕು. ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಜಾಗೃತಿ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗುವುದರಿಂದ ಮಾನಸಿಕವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಇವುಗಳನ್ನು ಪ್ರತಿಯೊಬ್ಬರು ತ್ಯಜಿಸಬೇಕು. ಬೇರೆಯವರಿಗೆ ಪ್ರೇರಣೆ ನೀಡಬೇಕು ಎಂದರು.
ಜಿಲ್ಲೆಯಾದ್ಯಂತ ಶಾಲಾ–ಕಾಲೇಜುಗಳಲ್ಲಿ ಈ ಕುರಿತು ಪ್ರತಿಜ್ಞಾವಿಧಿ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಚಿಕ್ಕಮಗಳೂರನ್ನು ಮಾದಕ ದ್ರವ್ಯ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು.
ಜಾಗೃತಿ ಜಾಥಾವು ತಾಲ್ಲೂಕು ಕಚೇರಿ ಆವರಣದಿಂದ ಹೊರಟು ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ತಲುಪಿತು. ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಕೈಯಲ್ಲಿ ಫಲಕಗಳನ್ನು ಹಿಡಿದು ಅರಿವು ಮೂಡಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಡಿವೈಎಸ್ಪಿ ಪುರುಷೋತ್ತಮ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.