ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇ–ಲೋಕ ಅದಾಲತ್ನಲ್ಲಿ ಇತ್ಯರ್ಥಪಡಿಸಲು ಒಟ್ಟು 4,884 ಪ್ರಕರಣಗಳನ್ನು ಗುರುತಿಸಲಾಗಿದೆ. ಮೊದಲ ದಿನ 700 ಪ್ರಕರಣಗಳು ಇತ್ಯರ್ಥವಾಗುವ ಸಾಧ್ಯತೆ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಶುಭಾ ಗೌಡರ್ ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಇ–ಲೋಕ ಅದಾಲತ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಕೋವಿಡ್–19 ನಿಮಿತ್ತ ದೇಶದಾ ದ್ಯಂತ ನ್ಯಾಯಾಲಯಗಳಲ್ಲಿ ಬಹುತೇಕ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ. ಅವುಗಳನ್ನು ತ್ವರಿತ ಗತಿಯಲ್ಲಿ ಬಗೆಹರಿಸುವ ನಿಮಿತ್ತ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಇ–ಲೋಕ ಅದಾಲತ್ ಆಯೋಜಿಸಲಾಗಿದೆ. ವಕೀಲರು, ಕಕ್ಷಿದಾರರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವ ಅಗತ್ಯ ಇಲ್ಲ. ಆನ್ಲೈನ್ ವಿಡಿಯೊ ಸಂವಾದದ ಮೂಲಕ ಅದಾಲತ್ನಲ್ಲಿ ಭಾಗವಹಿಸಿ, ವ್ಯಾಜ್ಯ ಬಗೆಹರಿಸಿಕೊಳ್ಳಬಹುದು. ಅದರಿಂದ ಕಕ್ಷಿದಾರರಿಗೆ ಸಮಯ ಉಳಿಯುತ್ತದೆ. ಖರ್ಚು ಕಡಿಮೆಯಾಗುತ್ತದೆ’ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ ಮಾತನಾಡಿ, ‘ಕೋವಿಡ್–19 ತಡೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಮೂಲಕ ಇ–ಅದಾಲತ್ ನಡೆಸಲಾಗುತ್ತಿದೆ’ ಎಂದರು.
ನ್ಯಾಯಾಧೀಶರಾದ ಕೆ.ಎಲ್.ಅಶೋಕ್, ಮಂಜುನಾಥ್ ಸಂಗ್ರೇಶಿ, ಎಸ್.ಎನ್.ಹೆಗ್ಡೆ, ಶಿಲ್ಪಾ, ಅರುಣಾಕುಮಾರಿ, ದೀಪಾ, ಚಾಂದಿನಿ, ವಕೀಲರ ಸಂಘದ ಜಿಲ್ಲಾಘಟಕದ ಅಧ್ಯಕ್ಷ ಕೆ.ಸಿ.ಶಿವಾ, ಕಾರ್ಯದರ್ಶಿ ಜಗದೀಶ್ ಇದ್ದರು.