ಬಾಳೆಹೊನ್ನೂರು: ಇಲ್ಲಿನ ಕಲಾರಂಗ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿಸಿದ್ದ 64ನೇ ವರ್ಷದ ವಿದ್ಯಾಗಣಪತಿ ವಿಸರ್ಜನಾ ಮಹೋತ್ಸವ ಶುಕ್ರವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ 400ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಜಿಲ್ಲೆಯಲ್ಲೇ ಅತಿದೊಡ್ಡ ಗಣೇಶ ಉತ್ಸವ ಇದಾಗಿದ್ದು, ವಿವಿಧೆಡೆಯಿಂದ 15 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಮಧ್ಯಾಹ್ನದ ನಂತರ ಪಟ್ಟಣದ ಮುಖ್ಯ ಮಾರ್ಗದಲ್ಲಿ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಲಿದೆ.
ಮದ್ಯ ಮಾರಾಟ ನಿಷೇಧ: ಬಾಳೆಹೊನ್ನೂರಿನಲ್ಲಿ ವಿನಾಯಕ ಸೇವಾ ಸಮಿತಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ಮೆರವಣಿಗೆ ಮತ್ತು ವಿಸರ್ಜನೆ ನಿಮಿತ್ತ ಇದೇ 16ರಂದು ಬಾಳೆಹೊನ್ನೂರು ಪಟ್ಟಣ ಭಾಗದಲ್ಲಿ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ.
ಶಾಂತಿ, ಸುವ್ಯವಸ್ಥೆ ನಿಟ್ಟಿನಲ್ಲಿ 16ರಂದು ಬೆಳಿಗ್ಗೆ 6ರಿಂದ 17ರಂದು ಬೆಳಿಗ್ಗೆ 6 ಗಂಟೆವರೆಗೆ ಬಾಳೆಹೊನ್ನೂರು ಮತ್ತು ಸುತ್ತಲಿನ 15 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಸಾಗಣೆಯನ್ನು ನಿಷೇಧಿಸಲಾಗಿದೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.