ಚಿಕ್ಕಮಗಳೂರು: ‘ನಗರ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಸುತ್ತಲಿನ 100 ಮೀ. ವ್ಯಾಪ್ತಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 200 ಮೀ. ವ್ಯಾಪ್ತಿಯಲ್ಲಿ ಖಾಸಗಿ ಔಷಧ ಮಳಿಗೆ ತೆರೆಯುವುದಕ್ಕೆ ಅನುಮತಿ ನೀಡದಿರಲು ಉದ್ದೇಶಿಸಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
‘ಈ ಕುರಿತು ಚರ್ಚಿಸಲಾಗಿದೆ. ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಈಗಾಗಲೇ ಇರುವ ಮಳಿಗೆಗಳ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಂಡಿಲ್ಲ. ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಉತ್ತರಿಸಿದರು.
ವಿದ್ಯುತ್ ದರ ಏರಿಕೆ ಅನಿವಾರ್ಯ: ‘ಕೋವಿಡ್ ಬಿಕ್ಕಟ್ಟಿನಿಂದಾಗಿ ಆರ್ಥಿಕ ಚಟುವಟಿಕೆಗಳು ಕಡಿಮೆಯಾಗಿವೆ. ಆದಾಯ ಕ್ರೋಡೀಕರಣ ಕಷ್ಟವಾಗಿದೆ. ಹೀಗಾಗಿ, ಅನಿವಾರ್ಯ ಪರಿಸ್ಥಿತಿಯಲ್ಲಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದೆ’ ಎಂದು ಪ್ರತಿಕ್ರಿಯಿಸಿದರು.