ಕಡೂರು: ಬೆಂಗಳೂರು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ಕಡೂರು ಸಾರ್ವಜನಿಕ ಆಸ್ಪತ್ರೆಗೆ 10 ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಶಾಸಕರ ಕಚೇರಿಯಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ಅವರಿಗೆ ಸಾಂದ್ರಕಗಳನ್ನು ಶಾಸಕ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಹಸ್ತಾಂತರಿಸಿದರು.
‘ಕೋವಿಡ್ ಎರಡನೇ ಅಲೆ ಜನಜೀವನವನ್ನು ಅತ್ಯಂತ ಸಂಕಷ್ಟಕ್ಕೆ ಸಿಲುಕಿಸಿದೆ. ಜನರಿಗೆ ಬಹುಮುಖ್ಯವಾಗಿ ಚಿಕಿತ್ಸೆ ಸಕಾಲದಲ್ಲಿ ದೊರೆಯಬೇಕು. ಅದಕ್ಕೆ ಪೂರಕವಾಗಿ ಆಸ್ಪತ್ರೆಗಳಲ್ಲಿ ಪರಿಕರಗಳು ಇರಬೇಕು. ಇದು ಸರ್ಕಾರದ ಆಶಯವೂ ಹೌದು. ಆ ನಿಟ್ಟಿನಲ್ಲಿ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಜತೆಗೆ ಅನೇಕ ದಾನಿಗಳು ಕೈಜೋಡಿಸಿರುವುದು ಸ್ವಾಗತಾರ್ಹ’ ಎಂದರು.
‘ಆರ್.ಆರ್.ನಗರದ ಶಾಸಕ ಮುನಿರತ್ನ ಅವರು ಬಹು ಅಭಿಮಾನ ದಿಂದ ಕಡೂರು ಆಸ್ಪತ್ರೆಗೆ ಮಾನವೀಯ ನೆಲೆಯಲ್ಲಿ ಹತ್ತು ಆಮ್ಲಜನಕ ಸಾಂದ್ರಕಗಳನ್ನು ವೈಯಕ್ತಿಕ ಕೊಡುಗೆಯಾಗಿ ನೀಡಿ ಹೃದಯವಂತಿಕೆ ಮೆರೆದಿದ್ದಾರೆ. ಕ್ಷೇತ್ರದ ಶಾಸಕನಾಗಿ ಜನತೆಯ ಪರವಾಗಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ’ ಎಂದು ಹೇಳಿದರು.