ಕೊಪ್ಪ: ‘ಬೀದಿ ಬದಿ ವ್ಯಾಪಾರಿಗಳು ಶುಚಿತ್ವ ಕಾಪಾಡದಿದ್ದಲ್ಲಿ ವ್ಯಾಪಾರ ಪರವಾನಗಿ ರದ್ದುಪಡಿಸಲಾಗು ತ್ತದೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುಬ್ಬಣ್ಣ ಎಚ್ಚರಿಸಿದರು.
ಪಟ್ಟಣ ಪಂಚಾಯಿತಿ ಸಭಾಂಗಣ ದಲ್ಲಿ ಶುಕ್ರವಾರ ಆಯೋಜಿಸಿದ್ದ ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಗರದ ಬೀದಿ ಬದಿ ವ್ಯಾಪಾರಿಗಳ ಉಪ ಘಟಕದಡಿ ಬೀದಿ ಬದಿ ವ್ಯಾಪಾರಿಗಳಿಗೆ ಅಧಿನಿಯಮ, ನಿಯಮ ಮತ್ತು ಯೋಜನೆಗಳ ಕುರಿತು ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.
‘ಡೇ-ನಲ್ಮ್ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಅನೇಕ ಸೌಲತ್ತು ಒದಗಿಸಲಾಗುತ್ತಿದೆ. ವ್ಯಾಪಾರಿಗಳು ಸ್ವಚ್ಛತೆ ಕಾಪಾಡಬೇಕು, ಪ್ಲಾಸ್ಟಿಕ್ ಬಳಸುವಂತಿಲ್ಲ. ಕಸ, ಘನತ್ಯಾಜ್ಯ ಎಲ್ಲೆಂದರಲ್ಲಿ ಹಾಕಬಾರದು. ಪಟ್ಟಣದ ಆರೋಗ್ಯ ನಿಮ್ಮ ಕೈಯಲ್ಲಿದೆ’ ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಲು ಪೌರ ಕಾರ್ಮಿಕರು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಶ್ರಮಿಸು ತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳು ಇದಕ್ಕೆ ಸಹಕರಿಸಬೇಕು’ ಎಂದರು.
ನಾಮನಿರ್ದೇಶಿತ ಸದಸ್ಯೆ ಸುಜಾತಾ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ವ್ಯಾಪಾರ ಅಭಿವೃದ್ಧಿಗೆ ಒತ್ತು ನೀಡಿ ಅನೇಕ ಯೋಜನೆ ರೂಪಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವ್ಯಾಪಾರಿಗಳಿಗೆ ಧನ ಸಹಾಯ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳು ದೇಶದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ’ ಎಂದು ತಿಳಿಸಿದರು.
ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಧಿಕಾರಿ ಹರ್ಷ ಪ್ರಾಸ್ತಾವಿಕ ಮಾತನಾಡಿದರು. ಕೌಶಲಾಭಿವೃದ್ಧಿ ಇಲಾಖೆಯ ಅಭಿಯಾನ ವ್ಯವಸ್ಥಾಪಕ ಎಂ.ಶಿವಲಿಂಗಯ್ಯ ಬೀದಿ ಬದಿ ವ್ಯಾಪಾರಿಗಳಿಗೆ ಸಾಮಾಜಿಕ ಭದ್ರತೆ, ಸಾಲ ಸೌಲಭ್ಯಗಳು ಇತ್ಯಾದಿ ಕುರಿತು, ಆರೋಗ್ಯ ಶಿಕ್ಷಣಾಧಿಕಾರಿ ಸುಧಾಕರ್ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ, ಸದಸ್ಯರಾದ ಸುಜಾತ, ಗಾಯತ್ರಿ ಶೆಟ್ಟಿ, ವಿಜಯಕುಮಾರ್, ಎಂ.ಪಿ.ಮೈತ್ರಾ, ರಶೀದ್, ಎ.ಎಲ್.ಎಫ್ ಒಕ್ಕೂಟದ ಅಧ್ಯಕ್ಷೆ ಪದ್ಮಾಕ್ಷಿ ಉದಯಕುಮಾರ್, ಕಾರ್ಯದರ್ಶಿ ಮಂಜುಳಾ ಸತೀಶ್, ವಕೀಲೆ ಸುಚೇತಾ ಇದ್ದರು.