ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಮತ್ತು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಬಿಜೆಪಿ ಅಭ್ಯರ್ಥಿ ಒಕ್ಕಲಿಗರಾಗಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಬಲಿಜ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕ್ಷೇತ್ರದಲ್ಲಿ ಎರಡೂ ಸಮುದಾಯದ ಮತದಾರರು ನಿರ್ಣಾಯಕ ಸಂಖ್ಯೆಯಲ್ಲಿದ್ದಾರೆ. ಆದರೂ, ಇಬ್ಬರೂ ಅಭ್ಯರ್ಥಿಗಳಿಗೆ ಒಳ ಏಟಿನ ಭೀತಿ ಕಾಡುತ್ತಿದೆ.
ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತದಾರರು ಬಹುಸಂಖ್ಯೆಯಲ್ಲಿದ್ದರೂ, ತೀರಾ ಕಡಿಮೆ ಸಂಖ್ಯೆಯ ಮತದಾರರನ್ನು ಹೊಂದಿರುವ ಸಮುದಾಯಗಳು ಕಾಂಗ್ರೆಸ್ನಿಂದ ಹೆಚ್ಚು ಬಾರಿ ಗೆಲುವು ಸಾಧಿಸಿರುವ ಇತಿಹಾಸವಿದೆ.ಆದರೆ ಈ ಬಾರಿ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ ತೀವ್ರವಾಗಿದೆ.
ಈ ಹಿಂದೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ ಬಿ.ಎನ್.ಬಚ್ಚೇಗೌಡ ಗೆಲುವಿನ ಮೂಲಕ ಬಿಜೆಪಿ ಮೊದಲ ಬಾರಿಗೆ ಖಾತೆ ತೆರೆಯಿತು. ಬಚ್ಚೇಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕಾರಣ ಇದೀಗ ಎರಡನೇ ಬಾರಿಗೆ ಕಮಲ ಅರಳಿಸುವ ಹೊಣೆ ಸುಧಾಕರ್ ಹೆಗಲೇರಿದೆ.