ನರಸಿಂಹರಾಜಪುರ: ಪಟ್ಟಣದ ವ್ಯಾಪ್ತಿಯಲ್ಲಿ ಆಶ್ರಯ ಬಡಾವಣೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ನಡೆದಿದ್ದು ಶೀಘ್ರದಲ್ಲೇ 158 ಆಶ್ರಯ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದು ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.
ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಆಶ್ರಯ ಮನೆ ನಿರ್ಮಾಣಕ್ಕೆ ಆಯ್ಕೆಯಾದ 3 ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು.
ಪಟ್ಟಣ ಆಶ್ರಯ ಯೋಜನೆಯಡಿ 50 ಮನೆಗಳು ಮಂಜೂರಾಗಿದ್ದವು. ಇದರಲ್ಲಿ 12 ಫಲಾನುಭವಿಗಳಿಗೆ ಮಾತ್ರ ಹಕ್ಕು ಪತ್ರವಿದೆ. ಹಿಂದೆ 7 ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಮಂಜೂರಾತಿ ಪತ್ರ ನೀಡಲಾಗಿದೆ. ಸರ್ಕಾರ ಮನೆ ನೀಡಿದ್ದರೂ ಮನೆ ನಿರ್ಮಾಣಕ್ಕೆ ಅನುದಾನ ನೀಡುತ್ತಿಲ್ಲ ಎಂದು ದೂರಿದರು. ಪಟ್ಟಣದ ವ್ಯಾಪ್ತಿ ಯಲ್ಲಿ ಹಲವು ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿ ವಾಸವಿದ್ದವರಿಗೆ ಹಕ್ಕು ಪತ್ರ ನೀಡಲು ಪ್ರಯತ್ನ ನಡೆಸಲಾಗಿದೆ. ಆದರೆ, ಇದಕ್ಕೆ ಮಾಜಿ ಶಾಸಕರು ಅಡ್ಡಿ ಪಡಿಸುತ್ತಿದ್ದಾರೆ ಎಂದು ದೂರಿದರು.
ಪಟ್ಟಣದ ವಿವಿಧ ಕಾಮಗಾರಿಗಳಿಗೆ ₹7 ಕೋಟಿ ಅನುದಾನ ಬಿಡುಗಡೆಯಾ ಗಿದ್ದು ಶೀಘ್ರದಲ್ಲೇ ಈ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು.
ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ ಮಾತನಾಡಿ, ಪಟ್ಟಣದ ವ್ಯಾಪ್ತಿಯಲ್ಲಿ ಶಾಸಕರ ಪ್ರಯತ್ನದಿಂದ 50 ಮನೆಗಳು ಮಂಜೂರಾಗಿದ್ದರೂ 12 ಜನರಿಗೆ ಮಾತ್ರ ಹಕ್ಕು ಪತ್ರವಿದೆ. 2021ರಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ. ಈಗಾಗಲೇ ಆಶ್ರಯ ಯೋಜನೆಯಡಿ 158 ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು ಇವರಿಗೆ ನಿವೇಶನವನ್ನು ವಿತರಿಸಲು ಶಾಸಕರು ಕ್ರಮಕೈಗೊಂಡ ದಶಕಗಳ ಕನಸನ್ನು ನನಸು ಮಾಡಬೇಕು ಎಂದರು.
ಪಟ್ಟಣದ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿಯ 154ನೇ ಜಯಂತಿಯ ಅಂಗವಾಗಿ ಚುನಾಯಿತ ಸದಸ್ಯರು ಪ್ರತಿ ಮಂಗಳವಾರ ಒಂದೊಂದು ವಾರ್ಡ್ ನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ನಗರೋತ್ಥಾನ ಯೋಜನೆಯ ₹7 ಕೋಟಿ ಅನುದಾನ ದಲ್ಲಿ ಸಂತೆ ಮಾರುಕಟ್ಟೆ, ಬಸ್ ನಿಲ್ದಾಣ, ಪ್ರಮುಖ ರಸ್ತೆ, ಪಾರ್ಕ್ ಅಭಿವೃದ್ಧಿ ಪಡಿಸಲಾಗುವುದು. ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಕುವೆಂಪು ಹಾಗೂ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿ ಪ್ರತಿಷ್ಠಾಪಿಸಲಾಗುವುದು ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷೆ ಉಮಾ, ಸದಸ್ಯರಾದ ಸುರಯ್ಯಬಾನು, ಸೈಯದ್ ವಸೀಂ, ಮುಕುಂದ, ಮುನಾವರ್ ಪಾಷ, ಮುಖ್ಯಾಧಿಕಾರಿ ಚಂದ್ರಕಾಂತ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.