ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಸೀಗೊಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 32 ಮಂದಿಗೆ ಕೋವಿಡ್ ದೃಢಪಟ್ಟಿದೆ.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಮೊದಲು ನಾಲ್ವರು ಸಿಬ್ಬಂದಿ ಮತ್ತು ಮೂವರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ನಂತರ 25 ಮಂದಿಗೆ ಪತ್ತೆಯಾಗಿದೆ. ಈವರೆಗೆ 32 ಮಂದಿಗೆ ದೃಢಪಟ್ಟಿದೆ. ಇನ್ನು ಹಲವರ ಪರೀಕ್ಷೆ ವರದಿ ಬರಬೇಕಿದೆ’ ಎಂದು ತಿಳಿಸಿದರು.
ಸೋಂಕಿತರು ಪ್ರತ್ಯೇಕ ಕೊಠಡಿಗಳಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ. ನಿಗಾ, ಆರೈಕೆ ನಿಟ್ಟಿನಲ್ಲಿ ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ. ಸಿಬ್ಬಂದಿ, ವಿದ್ಯಾರ್ಥಿಗಳು ಸಹಿತ ಒಟ್ಟು 418 ಮಂದಿಯ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ ಎಂದು ಆರೋಗ್ಯಾಧಿಕಾರಿಯೊಬ್ಬರು ತಿಳಿಸಿದರು.