ಕೊಪ್ಪ: ‘ಪಟ್ಟಣದ ಜನರಿಗೆ ಅಗತ್ಯವಿರುವ ಕಾಮಗಾರಿಗಳನ್ನು ನಗರೋತ್ಥಾನದಲ್ಲಿ ನಿರ್ವಹಿಸಲು ಪ್ರತಿ ವಾರ್ಡ್ ಗೆ ಭೇಟಿ ನೀಡಿ, ಕಾಮಗಾರಿಗಳನ್ನು ಪಟ್ಟಿಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಪಟ್ಟಣದಲ್ಲಿ ಬುಧವಾರ ಬಸ್ ನಿಲ್ದಾಣದ ಆವರಣದಲ್ಲಿ ನಗರೋತ್ಥಾನದ ನಾಲ್ಕನೆ ಹಂತದ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
‘ಸಮ್ಮಿಶ್ರ ಸರ್ಕಾರವಿದ್ದಾಗ ನಗರೋತ್ಥಾನದಲ್ಲಿ ₹2 ಕೋಟಿ ಬಿಡುಗಡೆಯಾಗಿತ್ತು. ನಂತರ ಬಂದ ಸರ್ಕಾರ ಅದನ್ನು ತಡೆಹಿಡಿದಿತ್ತು’ ಎಂದರು.
‘ಇದೀಗ ಕಷ್ಟಪಟ್ಟು ಅನುದಾನ ಬಿಡುಗಡೆ ಮಾಡಿಸಿಕೊಂಡು ಬಂದಿದ್ದೇವೆ. ಸರ್ಕಾರದಿಂದ ₹5 ಕೋಟಿ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಯಾರಿಗೂ ಸಮಸ್ಯೆ ಆಗದ ಹಾಗೆ ಮುಖ್ಯರಸ್ತೆಯನ್ನು ವಿಸ್ತರಿಸಲಾಗುವುದು’ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್, ‘ಸರ್ಕಾರ ಅನುದಾನ ನೀಡುತ್ತಿರುವುದರಿಂದ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಪ್ರತಿ ವಾರ್ಡ್ ಗೆ ಬೇಕಾದ ಅಗತ್ಯ ಕೆಲಸಗಳನ್ನು ಮಾಡಿಸಲಾಗುತ್ತಿದೆ. ಒಟ್ಟು ₹7 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುವುದು’ ಎಂದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ ವಸಂತ್, ಸ್ಥಾಯಿ ಸಮಿತಿ ಅಧ್ಯಕ್ಷೆ ಎಚ್.ಆರ್.ರೇಖಾ, ಪಂಚಾಯಿತಿ ಸದಸ್ಯರು ಇದ್ದರು.