ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ 15 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದ ತನಿಖೆಯನ್ನು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎನ್.ಶ್ರುತಿ ನೇತೃತ್ವದ ತಂಡ ಚುರುಕುಗೊಳಿಸಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಅವರು ಶನಿವಾರ ಶೃಂಗೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
‘ವಿವಿಧ ಆಯಾಮಗಳಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ. ಮತ್ತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ‘ಪ್ರಜಾವಾಣಿ’ಗೆ ತಿಳಿಸಿದರು.
ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿಕುಮಾರ್ ಅವರನ್ನು ಕರಾವಳಿ ಕಾವಲುಪಡೆಗೆ ವರ್ಗಾಯಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪಿಎಸ್ಐ ಗವಿರಾಜ್ ಅವರಿಗೆ ಹೊಣೆ ವಹಿಸಲಾಗಿದೆ. ಅಮಾನತುಗೊಂಡಿರುವ ಸಿಪಿಐ ಸಿದ್ದರಾಮಯ್ಯ ಅವರ ಜಾಗಕ್ಕೆ ನಗರ ಸಿಇಎನ್ ಇನ್ಸ್ಪೆಕ್ಟರ್ ರಕ್ಷಿತ್ ಅವರನ್ನು ನಿಯೋಜಿಸಲಾಗಿದೆ.
ಫೋನ್ ಕರೆಗಳ ವಿವರ, ಬಾಲಕಿ ಹೇಳಿಕೆ, ಆರೋಪಿಗಳ ಸಂಪರ್ಕ ಜಾಲ ಇತ್ಯಾದಿ ಆಧರಿಸಿ ತಂಡವು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. 9 ಮಂದಿ ತಲೆ ಮರೆಸಿಕೊಂಡಿದ್ದಾರೆ.