ಬೆಂಗಳೂರು:ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಸಿರಿಮನೆ ಜಲಪಾತದ ಬಳಿಯಿರುವ ಪಶ್ಚಿಮ ಘಟ್ಟ ಪ್ರದೇಶದ ಮೀಸಲು ಅರಣ್ಯವನ್ನು ಒತ್ತುವರಿ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಶೃಂಗೇರಿ ತಾಲ್ಲೂಕಿನರಾಮಚಂದ್ರರಾವ್ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
‘ಜಲಪಾತಕ್ಕೆ ಭೇಟಿ ನೀಡುವ ಜನರು ಕಸ ಮತ್ತು ಪ್ಲಾಸ್ಟಿಕ್ ಬಾಟಲಿ ಎಸೆಯುತ್ತಾರೆ. ಅಂತಹ ಚಟುವಟಿಕೆಗಳು ಪರಿಸರ ವಿಜ್ಞಾನಕ್ಕೆ ಹಾನಿ ಉಂಟು ಮಾಡಲಿವೆ. ಈ ನಡುವೆ ಕೆಲವರು ಅರಣ್ಯ ಪ್ರದೇಶವನ್ನು ಅತಿಕ್ರಮವಾಗಿ ಪ್ರವೇಶಿಸಿ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದಾರೆ’ ಎಂದು ಅರ್ಜಿದಾರರು ಆರೋಪಿಸಿದರು.
ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ತಹಶೀಲ್ದಾರ್ಗಿಂತ ಕಡಿಮೆಯಲ್ಲದ ದರ್ಜೆಯ ಅಧಿಕಾರಿಯನ್ನು ನೇಮಿಸುವಂತೆ ಪೀಠ ನಿರ್ದೇಶನ ನೀಡಿತು.