ಚಿಕ್ಕಮಗಳೂರು: ‘ಸರ್ಕಾರಿ ನೌಕರರಿಗೆ ರಾಜಕಾರಣಿಗಳಿಂದ ಒತ್ತಡ ಜಾಸ್ತಿ ಇದೆ. ಒತ್ತಡಗಳ ನಡುವೆಯೂ ಉತ್ತಮವಾಗಿ ಕಾರ್ಯನಿರ್ವಹಿಸಿ ಹೆಸರು ಗಳಿಸುವುದು ಸಪ್ತಸಾಗರ ಈಜಿ ದಡ ತಲುಪಿದಂತೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.
ಜಿಲ್ಲಾಡಳಿತ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಕುವೆಂಪು ಕಲಾ ಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಮತ್ತು ಜಿಲ್ಲಾ ಸರ್ವೋತ್ತಮ ನಾಗರಿಕ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರ್ಕಾರಿ ನೌಕರಿ ಎಂದರೆ ಈಗ ಮೊದಲಿನಂತಿಲ್ಲ. ಅದು ರೀತಿ ಮುಳ್ಳಿನ ಕುರ್ಚಿ ಇದ್ದಂತೆ. ಆಡಳಿತ ಪಕ್ಷ ಮತ್ತು ಪ್ರತಿ ಪಕ್ಷಗಳವರನ್ನು ನಿಭಾಯಿಸುವುದು ನೌಕರರಿಗೆ ಸವಾಲು ಎಂದು ಹೇಳಿದರು.
ನೌಕರರು ನಿಯಮಬದ್ಧವಾಗಿ, ಅಚ್ಚುಕಟ್ಟಾಗಿ, ಜನರ ನಿರೀಕ್ಷೆಗೆ ತಕ್ಕಂತೆ, ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಒಳ್ಳೆಯದು ಮಾಡಬೇಕು ಎಂದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ದೇಶ ಗಟ್ಟಿಯಾಗಿರಲು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ವ್ಯವಸ್ಥೆ ಕಾರಣ ಎಂದು ಹೇಳಿದರು.
ಸರ್ಕಾರಿ ನೌಕರರಿಗೆ ಪ್ರಾಮಾಣಿಕತೆ ಬಹಳ ಮುಖ್ಯ. ಹಲವರು ಉತ್ತಮವಾಗಿ ಕಾರ್ಯನಿರ್ವಹಿಸಿ ಇಲಾಖೆಗೆ ಒಳ್ಳೆಯ ಹೆಸರು ತಂದಿದ್ದಾರೆ. ಬಹಳಷ್ಟು ನೌಕರರು ಎಲೆಮರೆ ಕಾಯಿಯಂತೆ ಕಾರ್ಯನಿರ್ವಹಿಸುತ್ತಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ವ್ಯವಸ್ಥೆ ಮತ್ತು ನೌಕರರ ಬಗ್ಗೆ ಜನರಿಗೆ ಇರುವ ಗೌರವ ಕಡಿಮೆಯಾಗುತ್ತಿದೆಯೇ ಎಂಬ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.