ಚಿಕ್ಕಮಗಳೂರು: ರಾಜ್ಯದ ಪ್ರತಿ ತಾಲ್ಲೂಕಿಗೆ ಎರಡು ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ತಿಳಿಸಿದರು.
ತಾಲ್ಲೂಕಿನ ಲಕ್ಯಾ ಗ್ರಾಮದಲ್ಲಿ ವಿವೇಕ ಯೋಜನೆಯಡಿ ₹44 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ 4 ಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳಂತೆ ಸರ್ಕಾರಿ ಶಾಲೆಗಳಲ್ಲಿಯೂ ಮೂಲಸೌಕರ್ಯದ ಜತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬುದು ಸರ್ಕಾರದ ಮುಖ್ಯ ಉದ್ದೇಶ. ಆ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರ ಭಾಗವಾಗಿ ಲಕ್ಯಾ ಗ್ರಾಮದಲ್ಲಿ 4 ಶಾಲಾ ಕೊಠಡಿಗಳ ನಿರ್ಮಾಣವಾಗಿದ್ದು, ಇಂದು ಅವುಗಳ ಉದ್ಘಾಟನೆಯಾಗಿದೆ. ಲಕ್ಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ರೈತರ ಮಕ್ಕಳು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಸರ್ಕಾರ ವಿಶೇಷ ಒತ್ತು ನೀಡಿದೆ. ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯದ ಜತೆಗೆ ಬಿಸಿಯೂಟ, ಹಾಲು, ಮೊಟ್ಟೆ, ಉಚಿತ ಸಮವಸ್ತ್ರ ಸೇರಿದಂತೆ ಎಲ್ಲ ಸೌಲಭ್ಯ ನೀಡುತ್ತಿದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ರಾಜ್ಶೇಖರ್ ವಹಿಸಿದ್ದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶೋಭಾ, ಕಾಂತರಾಜ್ ಅರಸ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗವಿರಂಗಪ್ಪ ಪಾಲ್ಗೊಂಡಿದ್ದರು.