ಚಿಕ್ಕಮಗಳೂರು: ಆಲ್ದೂರಿನಲ್ಲಿ ನಡೆದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ನಾಗರಿಕರ ಮೇಲೆ ಪೊಲೀಸರು ನಡೆಸಿರುವ ದೌರ್ಜನವನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಸಾರ್ವಜನಿಕರು ಬುಧವಾರ ನಗರದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.
ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಆಗಮಿಸಿದ ಪ್ರತಿಭಟನಾ ನಿರತರು, ಜಿಲ್ಲಾ ಪೊಲೀಸ್್ ಮುಖ್ಯಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು. ದೌರ್ಜನ್ಯ ನಡೆಸಿರುವ ಠಾಣಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ನಿಷ್ಪಕ್ಷಪಾತ ತನಿಖೆ ನಡೆಸಿ ದೌರ್ಜನ್ಯ ನಡೆಸಿದವರನ್ನು ಕೂಡಲೇ ಅಮಾನತು ಪಡಿಸಬೇಕು. ಇಲ್ಲದಿದ್ದರೆ ನ್ಯಾಯ ಸಿಗುವತನಕ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಸ್ಥಳೀಯ ಮುಖಂಡ ಸುರೇಶಗೌಡ ಮಾತನಾಡಿ, ದೌರ್ಜನ್ಯ ನಡೆಸಿರುವವರನ್ನು ಕೂಡಲೇ ಅಮಾನತು ಪಡಿಸಬೇಕೆಂದು ಒತ್ತಾಯಿಸಿದರು. ಪೊಲೀಸರ ಮೇಲೆ ಇಟ್ಟಿರುವ ನಂಬಿಕೆಯನ್ನು ಕಳೆದುಕೊಳ್ಳುವಂತೆ ಆಲ್ದೂರು ಠಾಣಾಧಿಕಾರಿ ಮತ್ತು ಕೆಲವು ಸಿಬ್ಬಂದಿ ನಡೆದುಕೊಂಡಿದ್ದಾರೆಂದು ತಾ.ಪಂ. ಸದಸ್ಯ ಮಹೇಶ್ ತಿಳಿಸಿದರು.
ಹಳಿಯೂರು ಗ್ರಾಮದ ರಮೇಶ್ ಮಾತನಾಡಿ, ತಪ್ಪು ಮಾಡಿದವರ ವಿರುದ್ಧ ಕ್ರಮಕೈಗೊಂಡರೆ ಯಾವುದೇ ಅಭ್ಯಂತರವಿಲ್ಲ. ಆದರೆ ದಾರಿಯಲ್ಲಿ ಹೋಗುತ್ತಿದ್ದವರು ಮತ್ತು ಮನೆಯಲ್ಲಿದ್ದವರನ್ನು ಪೊಲೀಸರು ಕರೆತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದ್ವೇಷದಿಂದ ಕೃತ್ಯ ಎಸಗಿರುವುದು ಕಂಡುಬರುತ್ತದೆ ಎಂದರು.
ಶಾಸಕ ಸಿ.ಟಿ.ರವಿ ಮಾತನಾಡಿ, ನಾಗರಿಕ ಸಮಾಜ ತಲೆತಗ್ಗಿಸುವಂತೆ ಆಲ್ದೂರು ಪೊಲೀಸರು ನಡೆದುಕೊಂಡಿದ್ದಾರೆ. ಇದೇ ಪ್ರವೃತ್ತಿ ಮುಂದುವರೆದರೆ ಜನರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ. ಸಾರ್ವಜನಿಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸುವ ಮೂಲಕ ನೆಮ್ಮದಿಗೆ ಭಂಗವನ್ನುಂಟು ಮಾಡಲಾಗಿದೆ ಎಂದರು.
ನ್ಯಾಯಾಂಗ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಕೂಡಲೇ ಅಮಾನತು ಪಡಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ನಿರಪರಾಧಿಗಳ ಮೇಲೆ ಹಾಕಿರುವ ಮೊಕದ್ದಮೆಯನ್ನು ಹಿಂದಕ್ಕೆ ಪಡೆಯಬೇಕು. 10ದಿನದೊಳಗೆ ಅಗತ್ಯ ಕ್ರಮಕೈಗೊಳ್ಳದಿದ್ದರೆ ದೌರ್ಜನ್ಯಕ್ಕೆ ತಕ್ಕ ಉತ್ತರ ಕೊಡಬೇಕಾಗುತ್ತದೆ ಎಂದರು.
ಮನವಿ ಸ್ವೀಕರಿಸಿದ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಮಿತ್ರ ಹೆರಾಜೆ ನಿಷ್ಪಕ್ಷಪಾತ ತನಿಖೆ ನಡೆಸಿ ಹಿರಿಯ ಅಧಿಕಾರಿಗಳಿಗೆ ವರದಿ ಕಳುಹಿಸಿಕೊಡಲಾಗುವುದು ಎಂದರು. ನಾರಾಯಣ ಆಚಾರ್, ರುದ್ರೇಗೌಡ, ಕವೀಶ, ಸತೀಶ್ ಬಿಜೆಪಿ ಮುಖಂಡರಾದ ಪ್ರೇಂಕುಮಾರ್, ಕೋಟೆ ರಂಗನಾಥ್, ಕಲ್ಮರಡಪ್ಪ, ತಮ್ಮಯ್ಯ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.