ಶಾಲೆಗಳಿಗೆ ಹೊಸ ಕೋಣೆ; ಪ್ರಸ್ತಾವ ಸಲ್ಲಿಸಿ

ಚಿತ್ರದುರ್ಗ: ‘ತಾಲ್ಲೂಕಿನ ಯಾವ್ಯಾವ ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿ ಕೋಣೆಗಳ ಅವಶ್ಯಕತೆ ಇದೆ ಎಂಬುದನ್ನು ಮೊದಲು ಪಟ್ಟಿ ಮಾಡಿ. ಶಿಕ್ಷಣ ಇಲಾಖೆಯಿಂದ ಕ್ರಿಯಾಯೋಜನೆ ಸಿದ್ಧಪಡಿಸಿ ಪ್ರಸ್ತಾವ ಸಲ್ಲಿಸಿ’ ಎಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ಅಧಿಕಾರಿಗಳಿಗೆ ಸೂಚಿಸಿದರು.
ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಎಂಎಲ್ಸಿ ಅನುದಾನದಲ್ಲಿ ನಿರ್ಮಾಣವಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಕೆಲ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಶಿಥಿಲಾವಸ್ಥೆಯಲ್ಲಿ ಇರುವಂಥ ಕೋಣೆಗಳ ದುರಸ್ತಿಗೆ ಕ್ರಮ ಕೈಗೊಳ್ಳಿ ಎಂಬ ಬೇಡಿಕೆ ಇಟ್ಟಿದ್ದಾರೆ. ಸಮಸ್ಯೆಗಳಿದ್ದಲ್ಲಿ ಪ್ರಸ್ತಾವ ಸಲ್ಲಿಸಿ, ರಾಜ್ಯದ ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.
‘ಸರ್ಕಾರಿ ಪ್ರೌಢಶಾಲೆ ಕೋಟೆ ಸಮೀಪವಿರುವ ಟಿಸಿಎಚ್ ಕಾಲೇಜು ಕಟ್ಟಡವನ್ನು ಅನೇಕ ದಿನಗಳಿಂದ ಉಪಯೋಗಿಸುತ್ತಿಲ್ಲ. ಅದನ್ನು ಶಾಲೆಗೆ ನೀಡಿದರೆ, ಮತ್ತಷ್ಟು ಅಭಿವೃದ್ಧಿ ಪಡಿಸಲು ಅನುಕೂಲವಾಗಲಿದೆ. ಅಲ್ಲದೆ, ಶಾಲೆ ವ್ಯಾಪ್ತಿಯ ಸುತ್ತ ತಡೆಗೋಡೆ ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಕ್ರಮ ಕೈಗೊಳ್ಳಿ’ ಎಂದು ಶಾಲೆಯ ಮುಖ್ಯಶಿಕ್ಷಕ ಜಗದೀಶ್ ಮನವಿ ಮಾಡಿದರು.
ನಗರಸಭೆ ಸದಸ್ಯ ಮಂಜುನಾಥ ಗೊಪ್ಪೆ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಮೀನಾಕ್ಷಿ, ಎನ್ಎಸ್ಯುಐ ರಾಷ್ಟ್ರೀಯ ಕಾರ್ಯದರ್ಶಿ ಮಮತಾ ನೆರ್ಲಿಗೆ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಅವರೂ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.