ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 23 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ 63 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಮಂಗಳವಾರ 192 ಜನರ ಗಂಟಲು ಹಾಗೂ ಮೂಗಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಚಿತ್ರದುರ್ಗ ತಾಲ್ಲೂಕಿನ 5, ಹೊಸದುರ್ಗ ತಾಲ್ಲೂಕಿನ 3, ಹಿರಿಯೂರಿನ 11, ಚಳ್ಳಕೆರೆಯ 4 ಹಾಗೂ ಹೊಳಲ್ಕೆರೆ ತಾಲ್ಲೂಕಿನ ಒಬ್ಬರಿಗೆ ಸೋಂಕು ಇರುವುದು ಗೊತ್ತಾಗಿದೆ.
ಹಿರಿಯೂರು ತಾಲ್ಲೂಕಿನ 4, 9 ಮತ್ತು 16 ವರ್ಷದ ಬಾಲಕರು ಸೇರಿ 35, 71, 63, 28 ವರ್ಷದ ಪುರುಷರು, 48, 68, 55, 35 ವರ್ಷದ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಚಿತ್ರದುರ್ಗದ 35, 53, 36, 46 ವರ್ಷದ ಪುರುಷರು, 55 ವರ್ಷದ ಮಹಿಳೆಯಲ್ಲಿ ಕೋವಿಡ್ ದೃಢಪಟ್ಟಿದೆ.
ಚಳ್ಳಕೆರೆ ತಾಲ್ಲೂಕಿನ 70 ವರ್ಷದ ವೃದ್ಧ, 30 ವರ್ಷದ ಪುರುಷ ಹಾಗೂ 55 ವರ್ಷದ ಮಹಿಳೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹೊಸದುರ್ಗದ 36, 39 ವರ್ಷದ ಪುರುಷರು ಮತ್ತು 25 ವರ್ಷದ ಮಹಿಳೆ, ಹೊಳಲ್ಕೆರೆಯ 60 ವರ್ಷದ ಪುರುಷನಿಗೆ ಕೋವಿಡ್ ಅಂಟಿದೆ.
270 ಸೋಂಕಿತರ ಪೈಕಿ 6 ರೋಗಿಗಳು ಮೃತಪಟ್ಟಿದ್ದಾರೆ. 125 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 139 ಸಕ್ರಿಯೆ ಪ್ರಕರಣಗಳು ಜಿಲ್ಲೆಯಲ್ಲಿವೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 35, ಧರ್ಮಪುರದಲ್ಲಿ 26, ಹೊಸದುರ್ಗ ತಾಲ್ಲೂಕು ಬೆಲಗೂರಿನಲ್ಲಿ 12, ಪರಶುರಾಂಪುರದಲ್ಲಿ 9, ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗದಲ್ಲಿ 6, ನಾಯಕನಹಟ್ಟಿ ಹಾಗೂ ಕೆ.ಕೆ.ಪುರದಲ್ಲಿ ತಲಾ 5, ಭರಮಸಾಗರದಲ್ಲಿ 2 ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 69 ಕಂಟೈನ್ಮೆಂಟ್ ವಲಯಗಳಿವೆ.
63 ವರ್ಷದ ರೋಗಿ ಸಾವು
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 63 ವರ್ಷದ ಕೋವಿಡ್ ರೋಗಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮೃತಪಟ್ಟಿದ್ದಾರೆ. ಇದರಿಂದ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಹಿರಿಯೂರು ನಗರದ ಸೋಂಕಿತರು ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ಮಾರ್ಗಸೂಚಿಯ ಪ್ರಕಾರ ಹಿರಿಯೂರಿನಲ್ಲಿ ಅಂತ್ಯಕ್ರಿಯೆ ನೆರವೇರಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.