ಹಿರಿಯೂರು: ತಾಲ್ಲೂಕಿನ ಐಮಂಗಲ ಸಮೀಪದ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಏಕಾಏಕಿ ಅಡ್ಡಬಂದ ಕಾಡುಹಂದಿಗೆ ಡಿಕ್ಕಿ ಹೊಡೆದ ಕಾರು, ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ಮೃತರನ್ನು ವಿಜಯಕುಮಾರ್ (38) ಮತ್ತು ರವಿಕುಮಾರ್ (35) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಇತರ ಮೂವರು ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾಡು ಹಂದಿ ಸ್ಥಳದಲ್ಲೇ ಮೃತಪಟ್ಟಿದೆ.
ವಿಜಯಕುಮಾರ್ ಮತ್ತು ರವಿಕುಮಾರ್ ಕುಟುಂಬ ಸಮೇತರಾಗಿ ಬೆಂಗಳೂರಿನಿಂದ ದಾವಣಗೆರೆಗೆ ಸಾಗುತ್ತಿದ್ದರು. ಹೆದ್ದಾರಿಯಲ್ಲಿ ಅಡ್ಡಬಂದ ಕಾಡುಹಂದಿಗೆ ಡಿಕ್ಕಿ ಹೊಡೆದ ಕಾರು ರಸ್ತೆ ವಿಭಜಕಕ್ಕೆ ಅಪ್ಪಳಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸಮೀಪದ ಹೋಟೆಲ್ನಲ್ಲಿ ಊಟ ಮಾಡುತ್ತಿದ್ದವರು ನೆರವಿಗೆ ಧಾವಿಸಿ ಕಾರಿನಿಂದ ಎಲ್ಲರನ್ನೂ ಹೊರಗೆ ಎಳೆದಿದ್ದಾರೆ ಎಂದು ಐಮಂಗಲ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರಿನಲ್ಲಿದ್ದವರು ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.