ನಾಯಕನಹಟ್ಟಿ: ಐತಿಹಾಸಿಕ ನಾಯಕನಹಟ್ಟಿಯಲ್ಲಿ ನಡೆಯಲಿರುವ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ ನಡೆದಿದೆ. ಸ್ವಾಗತ ಸಮಿತಿಯ ಅಧ್ಯಕ್ಷರಾದ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರಿಗೆ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಹಾಗೂ ಕಸಾಪ ಹಿರಿಯ ಪದಾಧಿಕಾರಿಗಳು ಶನಿವಾರ ಅಧಿಕೃತ ಆಹ್ವಾನ ನೀಡಿದರು.
‘ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆ ಕುಂಠಿತವಾಗಿದ್ದವು. ಆದರೆ ಒಂದು ವರ್ಷದಿಂದ ಜಿಲ್ಲೆಯ ಎಲ್ಲ ತಾಲ್ಲೂಕುಗಳು ಮತ್ತು ಹೋಬಳಿ ಮಟ್ಟದಲ್ಲಿ ಸಾಹಿತ್ಯ ಪರಿಷತ್ತಿನ ಚಟುವಟಿಕೆ ನಿರಂತರವಾಗಿ ಸಾಗುತ್ತಿವೆ. 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪಟ್ಟಣದಲ್ಲಿ ಜ.21, 22ರಂದು ನಡೆಯಲಿದೆ.ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಬಿ. ತಿಪ್ಪಣ್ಣ ಮರಿಕುಂಟೆ ಅವರನ್ನು ಆಯ್ಕೆ ಮಾಡಲಾಗಿದೆ. ಭರದ ಸಿದ್ಧತೆಗಳು ನಡೆಯುತ್ತಿವೆ’ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಹೇಳಿದರು.
‘ಕನ್ನಡಸಾಹಿತ್ಯ ಪರಿಷತ್ತು ಹಾಗೂ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳ ಹಮ್ಮಿಕೊಂಡಿದ್ದ ಕನ್ನಡ ಜಾತ್ರೆ, ನುಡಿಹಬ್ಬಗಳಲ್ಲಿ ಪಾಲ್ಗೊಂಡಿದ್ದೇನೆ. ನನಗೂ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಕ್ಕೂ ಅವಿನಾಭಾವ ನಂಟಿದೆ ಎಂಬ ಭಾವನೆ ನನ್ನದು’ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.
ನಾಯಕನಹಟ್ಟಿಯಲ್ಲಿ ಸಮ್ಮೇಳನ ಹಮ್ಮಿಕೊಂಡಿರುವುದು ಹೆಮ್ಮೆಯ ಸಂಗತಿ. ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾದ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ (ಎತ್ತಿನಹಟ್ಟಿಗೌಡ್ರು), ಎಂ.ವೈ.ಟಿ.ಸ್ವಾಮಿ, ಜಿ.ಟಿ.ದೇವರಾಜ್, ಚಿನ್ನಯ್ಯ, ಹನುಮಣ್ಣ, ಮಂಜಣ್ಣ ಇದ್ದರು.