ಚಿತ್ರದುರ್ಗ: ತಾಲ್ಲೂಕಿನ ಬೊಗಳೆರಹಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬಂಗಾರಕ್ಕನಗುಡ್ಡ ಗ್ರಾಮದ ಕೇಶವಮೂರ್ತಿ (40), ನಾಗಮ್ಮ (30), ರಾಧಿಕಾ (22) ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗುತ್ತಿಗೆದಾರರಾಗಿರುವ ಕೇಶವಮೂರ್ತಿ ಕಾರಿನಲ್ಲಿ ಚಿತ್ರದುರ್ಗದಿಂದ ಜಗಳೂರಿನತ್ತ ಸಾಗುತ್ತಿದ್ದರು. ಗ್ರಾಮದಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸಂಬಂಧಿಕರನ್ನು ಕರೆದೊಯ್ಯುತ್ತಿದ್ದರು. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತುರುವನೂರು ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.