ಚಿತ್ರದುರ್ಗ: ಕೃಷಿ ಜಮೀನು ಉಳುಮೆ ಮಾಡಲು ರೈತರಿಗೆ ಡೀಸೆಲ್ ಸಬ್ಸಿಡಿ ನೀಡುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂದಿನ ಬಜೆಟ್ನಲ್ಲಿ ಈ ಬಗ್ಗೆ ತೀರ್ಮಾನ ಹೊರಬೀಳಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.
ಇಲ್ಲಿನ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಬುಧವಾರ ಏರ್ಪಡಿಸಿದ್ದ ಕೃಷಿ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಡೀಸೆಲ್ ಸಬ್ಸಿಡಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನ ಸೆಳೆಯಲಾಗಿದೆ. ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರೊಂದಿಗೆ ಚರ್ಚಿಸಲಾಗಿದೆ. ಮೀನುಗಾರರ ದೋಣಿಗಳಿಗೆ ನೀಡುವ ಸಬ್ಸಿಡಿ ಮಾದರಿಯಲ್ಲಿ ರೈತರಿಗೆ ಡೀಸೆಲ್ ಮಂಜೂರು ಮಾಡಬೇಕು ಎಂಬುದು ನನ್ನ ಬಹುದಿನಗಳ ಕನಸು. ಲೀಟರ್ಗೆ ₹ 20 ಸಬ್ಸಿಡಿ ಸಿಕ್ಕರೆ ರೈತರಿಗೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು.
ಇದಕ್ಕೂ ಮುನ್ನ ಮಾತನಾಡಿದ ಶಿವಮೂರ್ತಿ ಮುರುಘಾ ಶರಣರು, ‘ಕರಾವಳಿ ಭಾಗದಲ್ಲಿ ಮೀನುಗಾರರ ದೋಣಿಗಳಿಗೆ ಸಬ್ಸಿಡಿ ದರದಲ್ಲಿ ಡೀಸೆಲ್ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ರೈತರ ಟ್ರ್ಯಾಕ್ಟರ್ಗಳಿಗೂ ಸಬ್ಸಿಡಿ ದರದಲ್ಲಿ ಡೀಸೆಲ್ ನೀಡಬೇಕು’ ಎಂದು ಸಚಿವರನ್ನು ಕೋರಿಕೊಂಡರು.