ಗುರುವಾರ , ಮಾರ್ಚ್ 30, 2023
32 °C
ವಾರ್ಡ್‌ಗಳಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿ, ಪರಿಹರಿಸುವ ಭರವಸೆ

ಚಿತ್ರದುರ್ಗ ನಗರಸಭೆಗೆ ಅನುರಾಧಾ ನೂತನ ಉಪಾಧ್ಯಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಇಲ್ಲಿಯ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ‘ಚುನಾವಣೆ’ ಪ್ರಕ್ರಿಯೆಯಲ್ಲಿ ಎನ್‌.ಒ. ಅನುರಾಧಾ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಉಪವಿಭಾಗಾಧಿಕಾರಿ ಚಂದ್ರಯ್ಯ ಅವರು ಆಯ್ಕೆಯನ್ನು ಘೋಷಿಸಿದರು.

ಸದಸ್ಯೆ ಶ್ವೇತಾ ವೀರೇಶ್‌ ಈ ಹಿಂದೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿದ್ದ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಿಗದಿಯಂತೆ ಚುನಾವಣೆ ನಡೆಯಿತು. ಸದಸ್ಯೆ ಅನುರಾಧಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಅವರ ಅವಧಿ ಮುಂದಿನ ಒಂದು ವರ್ಷದವರೆಗೆ ಎಂದು ಮೂಲಗಳು ತಿಳಿಸಿವೆ.
ಇಲ್ಲಿಯ ನಗರಸಭೆಗೆ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಸಂಬಂಧ ಚುನಾಯಿತ 35 ಮಂದಿ ಸದಸ್ಯರು, ಶಾಸಕರು ಹಾಗೂ ಸಂಸದರು ಸೇರಿ ಒಟ್ಟು 37 ಜನ ಮತದಾನದ ಹಕ್ಕನ್ನು ಹೊಂದಿದ್ದಾರೆ. ಇದರಲ್ಲಿ 18 ಜನ ಮಾತ್ರ ಹಾಜರಾಗಿದ್ದರು. ಉಳಿದ 19 ಜನ ಗೈರಾಗಿದ್ದರು.

ನೂತನ ಉಪಾಧ್ಯಕ್ಷೆ ಅನುರಾಧಾ, ‘ನಗರದ ಸ್ವಚ್ಛತೆ, ಸಮರ್ಪಕ ಕುಡಿಯುವ ನೀರು ಪೂರೈಕೆ, ಬೀದಿ ದೀಪಗಳ ನಿರ್ವಹಣೆಯ ಕುರಿತು ಹೆಚ್ಚು ಆದ್ಯತೆ ನೀಡಲಾಗುವುದು. ನಿತ್ಯ ವಾರ್ಡ್‌ಗಳಲ್ಲಿ ಸಂಚರಿಸಿ ಸಾರ್ವಜನಿಕರು, ಮತದಾರರ ಸಮಸ್ಯೆ ಆಲಿಸುತ್ತೇನೆ. ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ಪೌರಾಯುಕ್ತ ಹನುಮಂತರಾಜು, ವ್ಯವಸ್ಥಾಪಕಿ ಮಂಜುಳಮ್ಮ, ಸಿಬ್ಬಂದಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು