ಚಿತ್ರದುರ್ಗ: ಮದ್ಯ ಮಾರಾಟ ನಿಷೇಧಿಸುವಂತೆ ಕೋರಿ ಹೊಸದುರ್ಗ ತಾಲ್ಲೂಕಿನ ಶಿರನಕಟ್ಟೆ ಕೋಡಿಹಳ್ಳಿಹಟ್ಟಿಯ ಮಹಿಳೆಯರು ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಜಿಲ್ಲಾ ಪಂಚಾಯಿತಿ ಎದುರು ಜಮಾಯಿಸಿದ ಗ್ರಾಮದ ಮಹಿಳೆಯರು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮದ ಬಹುತೇಕರು ಹಿಂದುಳಿದ ಜನಾಂಗಕ್ಕೆ ಸೇರಿದವರು. ಕೃಷಿ ಕೂಲಿ ಕಾರ್ಮಿಕರಾಗಿ ಬದುಕು ಕಟ್ಟಿಕೊಂಡಿದ್ದೇವೆ. ಗ್ರಾಮದಲ್ಲಿ ಮದ್ಯ ಲಭ್ಯವಾಗುತ್ತಿದ್ದು, ಪುರುಷರು ಮದ್ಯ ವ್ಯಸನಿಗಳಾಗುತ್ತಿದ್ದಾರೆ. ವಿದ್ಯಾರ್ಥಿಗಳು, ಯುವಕರು ಮದ್ಯ ಸೇವಿಸುತ್ತಿದ್ದಾರೆ. ಇದು ಮಹಿಳೆಯರಲ್ಲಿ ಆತಂಕ ಮೂಡಿಸಿದೆ ಎಂದರು.
ಪುರುಷರು ಮದ್ಯ ಸೇವಿಸಿ ಅಲೆದಾಡುತ್ತಿದ್ದಾರೆ. ಕೃಷಿ ಕೆಲಸಕ್ಕೆ ಬರಲು ನಿರಾಕರಿಸುತ್ತಿದ್ದಾರೆ. ವಿದ್ಯಾರ್ಥಿಗಳು ಶಾಲೆ–ಕಾಲೇಜುಗಳಿಗೆ ತೆರಳುತ್ತಿಲ್ಲ. ಮಕ್ಕಳ ಭವಿಷ್ಯ ಹಾಳಾಗುತ್ತಿದೆ ಎಂಬ ನೋವು ಕಾಡುತ್ತಿದೆ. ಮದ್ಯ ಮಾರಾಟ ನಿಷೇಧಕ್ಕೆ ಹಲವು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.
ಆರ್ಥಿಕ ಹಾಗೂ ರಾಜಕೀಯವಾಗಿ ಪ್ರಬಲರಾಗಿರುವವರು ಎಲ್ಲೆಂದರಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಗ್ರಾಮದ ನಾಲ್ಕೈದು ಸ್ಥಳದಲ್ಲಿ ಮದ್ಯ ಸಿಗುತ್ತಿದೆ. ಮದ್ಯ ಸೇವನೆಯಿಂದ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿವೆ. ಅಧಿಕಾರಿಗಳು ಗ್ರಾಮದ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿಕೊಂಡರು.