ಹಿರಿಯೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಪರವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿವೃತ್ತ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪ ಸೋಮವಾರ ಪ್ರಚಾರ ನಡೆಸಿದರು.
ನಗರದ ಸರ್ಕಾರಿ ಪಿಯು ಕಾಲೇಜು ಹಾಗೂ ವಿವಿಧ ಶಾಲಾ–ಕಾಲೇಜುಗಳಿಗೆ ಭೇಟಿ ನೀಡಿದ್ದ ಅವರು, ‘ಶಿಕ್ಷಕರ ಪರವಾಗಿ ಧ್ವನಿ ಎತ್ತುವ, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ನಾರಾಯಣಸ್ವಾಮಿ ಮತ್ತೊಮ್ಮೆ ಪರಿಷತ್ತಿಗೆ ಆಯ್ಕೆಯಾಗಲು ಶಿಕ್ಷಕರು ಮತ ನೀಡಬೇಕು’ ಎಂದು ಮನವಿ ಮಾಡಿದರು.
ಚಿತ್ರದುರ್ಗದ ಮಹಾರಾಣಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಸವರಾಜ್, ಅಕ್ಷರ ದಾಸೋಹ ಯೋಜನೆಯ ನಿವೃತ್ತ ಸಹಾಯಕ ನಿರ್ದೇಶಕ ಚಿನ್ನರಾಜು, ನಿವೃತ್ತ ಉಪ ಪ್ರಾಂಶುಪಾಲ ಕೆ. ರಾಮಚಂದ್ರಪ್ಪ ಹಾಜರಿದ್ದರು.