ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಶಕ್ತಿ. ಹತ್ತು ವರ್ಷಗಳಿಂದ ಪಾರದರ್ಶಕ ಆಡಳಿತ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.
ಇಲ್ಲಿನ ಉಮಾಪತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಂಗಳವಾರ ಹಮ್ಮಿಕೊಂಡಿದ್ದ ಶಕ್ತಿ ಕೇಂದ್ರದ ಪ್ರಮುಖರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
‘ಮತದಾನಕ್ಕೆ ಇನ್ನೊಂದು ವಾರ ಮಾತ್ರ ಬಾಕಿ ಇದೆ. ಪಕ್ಷದ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಬೇಕು. ಉದ್ಯೋಗ ನಿಮಿತ್ತ ಬೇರೆ ಊರುಗಳಲ್ಲಿ ಇರುವವರನ್ನು ಸಂಪರ್ಕಿಸಿ ಮತದಾನಕ್ಕೆ ಕರೆಯಿಸಿಕೊಳ್ಳಬೇಕು. ಪ್ರತಿ ಮನೆಗೆ ತೆರಳಿ ಮತಯಾಚನೆ ಮಾಡಿದಾಗ ಮಾತ್ರ ಇದು ಸಾಧ್ಯ. ಬಿಜೆಪಿ–ಜೆಡಿಎಸ್ ಮೈತ್ರಿಕೂಟ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದರು.
‘ಕಾಂಗ್ರೆಸ್ ವರಿಷ್ಠರೊಬ್ಬರು ಕಲಬುರಗಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಮತ್ತೊಬ್ಬರು ಮೈಸೂರು–ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಮಾತ್ರ ಓಡಾಡುತ್ತಿದ್ದಾರೆ. ಇನ್ನೊಬ್ಬರು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸೀಮಿತವಾಗಿದ್ದಾರೆ’ ಎಂದು ಹೆಸರು ಉಲ್ಲೇಖಿಸದೇ ವಾಗ್ದಾಳಿ ನಡೆಸಿದರು.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ, ಶಾಸಕರಾದ ಎಂ.ಚಂದ್ರಪ್ಪ, ಕೆ.ಎಸ್.ನವೀನ್, ಚಿದಾನಂದಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ ಇದ್ದರು.