ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಶರಣರ ವಿರುದ್ಧದ ಪ್ರಕರಣ: ಬಸವರಾಜನ್‌, ಸೌಭಾಗ್ಯ ಅರ್ಜಿ ವಿಚಾರಣೆ ಮುಂದಕ್ಕೆ

Last Updated 17 ಜನವರಿ 2023, 16:07 IST
ಅಕ್ಷರ ಗಾತ್ರ

ಬೆಂಗಳೂರು: ‘ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ‘ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಮುರುಘಾ ಶರಣರ ವಿರುದ್ಧ ದಾಖಲಾದ ಲೈಂಗಿಕ ದೌರ್ಜನ್ಯದ ಎರಡನೇ ಪ್ರಕರಣದಲ್ಲಿ ದೂರು ದಾಖಲಿಸಿರುವ ನಡೆಯ ಹಿಂದೆ ಮಾಜಿ ಆಡಳಿತಾಧಿಕಾರಿ ಎಸ್‌.ಕೆ.ಬಸವರಾಜನ್‌ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್‌ ಪಿತೂರಿ ಅಡಗಿದೆ‘ ಎಂದು ಆರೋಪಿಸಲಾದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.ವಿರುದ್ಧ ದಾಖಲಾದ ಲೈಂಗಿಕ ದೌರ್ಜನ್ಯದ ಎರಡನೇ ಪ್ರಕರಣದಲ್ಲಿ ದೂರು ದಾಖಲಿಸಿರುವ ನಡೆಯ ಹಿಂದೆ ಮಾಜಿ ಆಡಳಿತಾಧಿಕಾರಿ ಎಸ್‌.ಕೆ.ಬಸವರಾಜನ್‌ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್‌ ಪಿತೂರಿ ಅಡಗಿದೆ‘ ಎಂದು ಆರೋಪಿಸಲಾದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಈ ಸಂಬಂಧ ಎಸ್.ಕೆ.ಬಸವರಾಜನ್‌ ಮತ್ತು ಸೌಭಾಗ್ಯ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯು, ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ಮಧ್ಯಾಹ್ನ ವಿಚಾರಣೆಗೆ ಕರೆದಾಗ, ಅರ್ಜಿದಾರರ ಪರ ಹಿರಿಯ ವಕೀಲ ಹಷ್ಮತ್‌ ಪಾಷ ಅವರು ಬೇರೊಂದು ಪ್ರಕರಣದಲ್ಲಿ ಕೋರ್ಟ್‌ ಹಾಲ್‌ನಲ್ಲಿ ವಾದ ಮಂಡಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ಪರ ವಕೀಲರು ವಿಚಾರಣೆಯನ್ನು ಮತ್ತೊಂದು ದಿನಕ್ಕೆ ನಿಗದಿಪಡಿಸುವಂತೆ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿಯನ್ನು ಇದೇ 31ಕ್ಕೆ ಮುಂದೂಡಿದೆ.

‘ಮುರುಘಾ ಶರಣರು ನನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಸಂತ್ರಸ್ತೆಯರ ತಾಯಿ 2022ರ ಅಕ್ಟೋಬರ್ 13ರಂದು ಮೈಸೂರಿನ ನಜರ್‌ಬಾದ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ಈ ದೂರು ದಾಖಲೆಯ ಹಿಂದೆ ಎಸ್‌.ಕೆ.ಬಸವರಾಜನ್‌ ಮತ್ತು ಅವರ ಪತ್ನಿ ಸೌಭಾಗ್ಯ ಅವರ ಪಿತೂರಿ ಇದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ ಎನ್ನಲಾದ ಆಡಿಯೊ ವಿಡಿಯೊ ದಾಖಲೆಗಳ ಆಧಾರದಲ್ಲಿ ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರು, ಪತಿ–ಪತ್ನಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದಾರೆ.

‘ಪೊಲೀಸರು ಕಾನೂನು ಬಾಹಿರವಾಗಿ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದು ನಮ್ಮ ಮೂಲಭೂತ ಹಕ್ಕಿನ ಉಲ್ಲಂಘನೆ. ಅಂತೆಯೇ ಇದು ನಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕ್ರಮವಾಗಿದೆ. ಆದ್ದರಿಂದ, ಈ ಕುರಿತ ಎಫ್‌ಐಆರ್ ರದ್ದುಗೊಳಿಸಬೇಕು‘ ಎಂದು ಬಸವರಾಜನ್‌ ಮತ್ತು ಸೌಭಾಗ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಮುರುಘಾ ಶರಣರಿಂದ ತಾತ್ಕಾಲಿಕ ವ್ಯವಸ್ಥೆಗಾಗಿ ನೇಮಕಗೊಂಡಿರುವ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಆಡಳಿತಾಧಿಕಾರಿ ಅರ್ಜಿ: ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್‌ಜೆಎಂ) ಬೃಹನ್ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಬುಧವಾರ (ಜ.18) ಕೈಗೆತ್ತಿಕೊಳ್ಳಲಿದೆ.

ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು (ಡಬ್ಲ್ಯು.ಪಿ 25316/2022) ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ಏಕಸದಸ್ಯ ನ್ಯಾಯಪೀಠ ಬೆಳಗಿನ ಕಲಾಪದಲ್ಲಿ ಹೆಚ್ಚಿನ ವಿಚಾರಣೆ ಮುಂದುವರಿಸಲಿದೆ.

ಶಿವಮೂರ್ತಿ ಮುರುಘಾ ಶರಣರು, ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಜೈಲು ಸೇರಿದ್ದು, ರಾಜ್ಯ ಸರ್ಕಾರ ಪಿ.ಎಸ್.ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT