ಮೊಳಕಾಲ್ಮುರು: ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಸೋಮಶೇಖರ್ ಅವರು ಗುರುವಾರ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ತಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮದೇವರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ವೀಕ್ಷಿಸಿದರು.
ಕಾರ್ಮಿಕರ ಜತೆ ಕೂಲಿ, ಕೆಲಸ ನೀಡುವಿಕೆ ಬಗ್ಗೆ ಚರ್ಚೆ ನಡೆಸಿದರು. ನಂತರ ರಾಂಪುರ ಗ್ರಾಮದಲ್ಲಿ ಉದ್ಯೋಗಖಾತ್ರಿ ಯೋಜನೆಯಲ್ಲಿ ಸ್ಥಾಪಿಸಿರುವ ಕೂಸಿನ ಮನೆಯನ್ನು ವೀಕ್ಷಿಸಿದರು. ನಂತರ ಮೊಳಕಾಲ್ಮುರಿನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು.
ಇದೇ ವೇಳೆ ರಾಯದುರ್ಗ ರಸ್ತೆಯಲ್ಲಿರುವ ಎಂ.ಡಿ. ಮಹದೇವಪ್ಪ ಸಸ್ಯಕ್ಷೇತ್ರಕ್ಕೆ ಭೇಟಿ ನೀಡಿ ಸಸಿ ನಾಟಿ ಬಗ್ಗೆ ಮಾಹಿತಿ ಪಡೆದರು. ನಂತರ ಕೊಂಡ್ಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕಂಬಳಿ ನೇಕಾರರಿಂದ ಉದ್ಯಮದ ಆಗುಹೋಗು, ಸರ್ಕಾರದಿಂದ ಸಿಗಬೇಕಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಕೆರೆಕೊಂಡಾಪುರ ಹಾಗೂ ಅಶೋಕ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಸಮುದ್ರದಲ್ಲಿ ಜಲ್ ಜೀವನ್ ಯೋಜನೆ ಕಾಮಗಾರಿ ವೀಕ್ಷಿಸಿದರು. ನಂತರ ಸ್ಥಳೀಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಹಾಗೂ ಗುಣಮಟ್ಟದ ಆಹಾರ ವಿತರಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ, ತಾಲ್ಲೂಕು ಪಂಚಾಯಿತಿ ಇಒ ಕೆ.ಆರ್. ಪ್ರಕಾಶ್, ಜಿಲ್ಲಾ ಪಂಚಾಯಿತಿ ಕುಡಿಯುವ ನೀರು ವಿಭಾಗದ ಎಂಜಿನಿಯರ್ ನಾಗನಗೌಡ, ಜಲ್ ಜೀವನ್ ಯೋಜನೆ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್ ಎಸ್. ನಾಡರ್, ಪಿಡಿಒ ಗುಂಡಪ್ಪ ಇದ್ದರು.