ಚಿತ್ರದುರ್ಗ: ರಸ್ತೆ ವಿಸ್ತರಣೆಗೆ ಗುರುತಿಸಿದ ಕಟ್ಟಡ ಹಾಗೂ ನಗರದಲ್ಲಿ ಕೈಗೆತ್ತಿಕೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಶುಕ್ರವಾರ ಪರಿಶೀಲಿಸಿದರು. ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ಬೆಳಿಗ್ಗೆ ನಗರ ಪ್ರದಕ್ಷಿಣೆ ಹಾಕಿದ ಜಿಲ್ಲಾಧಿಕಾರಿ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ತಾಕೀತು ಮಾಡಿದರು. ಸಾರ್ವಜನಿಕರ ಸಮಸ್ಯೆ ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಗರದ ಬಿ.ಡಿ.ರಸ್ತೆ ವಿಸ್ತರಣೆ ಸೇರಿದಂತೆ ಹಲವು ಕಾಮಗಾರಿಗಳನ್ನು ಏಕಕಾಲಕ್ಕೆ ಕೈಗೆತ್ತಿಕೊಳ್ಳಲಾಗಿದೆ. ಗಾಂಧಿ ವೃತ್ತದಿಂದ–ಕನಕ ವೃತ್ತದವರೆಗಿನ ಹೊಳಲ್ಕೆರೆ ರಸ್ತೆ, ಗಾಂಧಿ ವೃತ್ತದಿಂದ ಜೆಎಂಐಟಿ ವೃತ್ತದವರೆಗಿನ ದಾವಣಗೆರೆ ಮಾರ್ಗದ ವಿಸ್ತರಣೆ ಕಾಮಗಾರಿ ಆರಂಭವಾಗಬೇಕಿದೆ. ರಸ್ತೆ ಬದಿಯಲ್ಲಿ ತೆರವುಗೊಳಿಸುವ ಕಟ್ಟಡಗಳನ್ನು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅರಿತರು.
ಪ್ರವಾಸಿ ಮಂದಿರದ ಎದುರಿನ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಆಹಾರ ಪರಿಶೀಲಿಸಿದರು. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮಾಸ್ಕ್ ಧರಿಸಿದವರಿಗೆ ಮಾತ್ರ ಸೇವೆ ಒದಗಿಸುವಂತೆ ಸೂಚಿಸಿದರು. ಕ್ಯಾಂಟೀನ್ ಒಳಗೆ ಅಂತರ ಕಾಯ್ದುಕೊಳ್ಳುವಂತೆ ಹೇಳಿದರು.
ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಸತೀಶ್ ಬಾಬು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಅಲ್ಲಾಭಕ್ಷಿ, ಪೌರಾಯುಕ್ತ ಜಿ.ಟಿ.ಹನುಮಂತರಾಜು ಇದ್ದರು.