ಚಿತ್ರದುರ್ಗ: ಕೃಷಿ, ಕಂದಾಯ ಇಲಾಖೆ ಸೇರಿದಂತೆ ಸರ್ಕಾರದ ಹಲವು ಸೌಲಭ್ಯ ಪಡೆಯಲು ರೈತರು ಜಮೀನಿನ ಪಹಣಿ ಹಾಗೂ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಲಹೆ ನೀಡಿದರು.
ಕೃಷಿ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಕಾಲಮಿತಿಯಲ್ಲಿ ಆಂದೋಲನ ಪೂರ್ಣಗೊಳಿಸಲು ಸೂಚನೆ ನೀಡಿದರು.
‘ರೈತರು ತಕ್ಷಣ ಆಧಾರ್-ಪಹಣಿ ಜೋಡಣಿ ಮಾಡಿಕೊಳ್ಳಬೇಕು. ಆಧಾರ್ ಜೋಡಣಿಯಾದರೆ ಸರ್ಕಾರದ ಸೌಲಭ್ಯಗಳು ಸುಲಭವಾಗಿ ಸಿಗಲಿವೆ. ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೋಂದಾಯಿಸಿ ಗುರುತಿನ ಚೀಟಿ ಪಡೆದುಕೊಳ್ಳುವುದು ಅವಶ್ಯಕ’ ಎಂದು ಹೇಳಿದರು.
‘ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿ ಆಯ್ಕೆಗೆ ಇದರಿಂದ ಅನುಕೂಲವಾಗಲಿದೆ. ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆ ಪ್ರಯೋಜನ ಪಡೆಯಲು ಸಾಧ್ಯವಾಗಲಿದೆ. ಕೃಷಿ ಇಲಾಖೆ ಪ್ರತಿನಿಧಿ, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ, ತೋಟಗಾರಿಗೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ, ಉಪವಿಭಾಗಾಧಿಕಾರಿ ವಿ.ಪ್ರಸನ್ನ, ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಸದಾಶಿವ, ಉಪನಿರ್ದೇಶರಾದ ಹುಲಿರಾಜ್, ಪ್ರಭಾಕರ್ ಇದ್ದರು.
***
ಕಳಪೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು. ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. –ಕವಿತಾ ಎಸ್.ಮನ್ನಿಕೇರಿ,ಜಿಲ್ಲಾಧಿಕಾರಿ