ಮೊಳಕಾಲ್ಮುರು: ಫಸಲ್ ಬಿಮಾ ಮಂಜೂರಾತಿಯಲ್ಲಿ ಆಗಿರುವ ತಾರತಮ್ಯ ಸರಿಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಸಚಿವ ಬಿ. ಶ್ರೀರಾಮುಲು ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಮೊಳಕಾಲ್ಮುರು ಮತ್ತು ಚಳ್ಳಕೆರೆ ತಾಲ್ಲೂಕಿನಲ್ಲಿ ತೀವ್ರ ಅನ್ಯಾಯವಾಗಿದ್ದು, ಮೊಳಕಾಲ್ಮುರು ತಾಲ್ಲೂಕಿನಲ್ಲಿ 16 ಗ್ರಾಮ ಪಂಚಾಯಿತಿಗಳ ಪೈಕಿ ಕೇವಲ 3 ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ವಿಮೆ ಪಾವತಿಸಿದ್ದ ಸಾವಿರಾರು ರೈತರು ದಿಕ್ಕು ತೋಚದಂತಾಗಿದ್ದಾರೆ. ಒಂದೇ ಬದುವಿನ ಹೊಲಗಳಿಗೆ ಬೇರೆ, ಬೇರೆ ರೀತಿಯಲ್ಲಿ ವಿಮೆ ಮಂಜೂರು ಮಾಡಲಾಗಿದೆ ಎಂದು ದೂರಿದರು.
ಈ ಹಿಂದೆ ತಮಗೆ ದೂರು ಸಲ್ಲಿಸಿದಾಗ ಸರ್ಕಾರದ ಜತೆ ಮಾತುಕತೆ ನಡೆಸಿ ಎಲ್ಲಾ ರೈತರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದಿರಿ. ಆದರೆ, ಈವರೆಗೆ ಇದು ಕಾರ್ಯರೂಪಕ್ಕೆ ಬಂದಿಲ್ಲ. ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
ಈ ಬಗ್ಗೆ ಅಧಿಕಾರಿಗಳ ಸಭೆ ಕರೆದು ಮಾತುಕತೆ ನಡೆಸುವುದಾಗಿ ಸಚಿವ ಶ್ರೀರಾಮುಲು ಭರವಸೆ ನೀಡಿದರು.
ರೈತ ಸಂಘದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಮರ್ಲಹಳ್ಳಿ ರವಿಕುಮಾರ್, ಸೂರಮ್ಮನಹಳ್ಳಿ ರಾಜಣ್ಣ, ಎಸ್. ಮಂಜುನಾಥ್, ಡಿ.ಬಿ. ಕೃಷ್ಣಮೂರ್ತಿ, ಕನಕ ಶಿವಮೂರ್ತಿ, ಹೇಮಣ್ಣ, ಬಿ.ವಿ. ತಿಪ್ಪೇಸ್ವಾಮಿ ಭಾಗವಹಿಸಿದ್ದರು.