ಚಿತ್ರದುರ್ಗ: ಐತಿಹಾಸಿಕ ಏಳು ಸುತ್ತಿನ ಕೋಟೆಯ ಬಾಗಿಲು ತೆರೆದು ವಾರ ಕಳೆದಿದೆ. ಆದರೆ, ಪ್ರವಾಸಿಗರು ಮಾತ್ರ ವೀಕ್ಷಣೆಗೆ ಬರುತ್ತಿಲ್ಲ. ಇದರಿಂದ ಪ್ರವಾಸಿತಾಣ ಭಣ–ಭಣ ಎನ್ನುತ್ತಿದೆ.
ಕೊರೊನಾ ಸೋಂಕಿನ ಎರಡನೇ ಅಲೆ ಕಾಣಿಸಿಕೊಂಡ ಕಾರಣಕ್ಕೆ ಏಪ್ರಿಲ್ ತಿಂಗಳಲ್ಲಿ ಕೋಟೆ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿತ್ತು. ಸೋಂಕಿನ ತೀವ್ರತೆ ಕಡಿಮೆಯಾಗಿದ್ದರಿಂದ ಜೂನ್ 16ರಂದು ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಗಿದೆ.
ಕೋಟೆಯ ಮುಖ್ಯ ಬಾಗಿಲನ್ನು ಮುಚ್ಚಲಾಗಿದೆ. ಟಿಕೇಟ್ ಕೌಂಟರ್ ಸಮೀಪದ ಸಣ್ಣ ಗೇಟ್ನಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ಗೆ ಆನ್ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. ನಗದು ಸ್ವೀಕಾರ ಪದ್ಧತಿಯನ್ನು ಕೈಬಿಡಲಾಗಿದೆ. ಬೆಳಿಗ್ಗೆ 12 ಗಂಟೆಯವರೆಗೆ ಮಾತ್ರ ವೀಕ್ಷಣೆಗೆ ಅವಕಾಶವಿದೆ.
ಕೋಟೆ ಪ್ರವೇಶಿಸುವ ಪ್ರವಾಸಿಗರಿಗೆ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವಂತೆ ಭದ್ರತಾ ಸಿಬ್ಬಂದಿ ತಾಕೀತು ಮಾಡುತ್ತಾರೆ. ಬೆಟ್ಟದಲ್ಲಿ ವಾಯುವಿಹಾರ ನಡೆಸಲು ಅವಕಾಶ ನಿರಾಕರಿಸಲಾಗಿದೆ. ದೇಗುಲಕ್ಕೆ ಭೇಟಿ ನೀಡುವ ಭಕ್ತರಿಗೂ ನಿರ್ಬಂಧ ವಿಧಿಸಲಾಗಿದೆ.