ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ರಾಜ್ಯದ ಪರಿಶಿಷ್ಟ ಪಂಗಡ ಸಮುದಾಯಕ್ಕೆ ವಂಚಿಸಿಕೊಂಡು ಬಂದಿದ್ದಾರೆ. ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿದ ₹ 11,143 ಕೋಟಿ ಹಣವನ್ನು ನಿಗಮಗಳಿಂದ ವಾಪಸ್ ಪಡೆದು ಅನ್ಯ ಕಾರ್ಯಗಳಿಗೆ ಬಳಸಿದ್ದಾರೆ. ಇದರಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಕುತ್ತು ಬಂದಿದೆ. ಹಾಗೇ ವಸತಿನಿಲಯಗಳ ನಿರ್ವಹಣೆಗೆ ಅನುದಾನ ಬಂದಿಲ್ಲ. ಬೀದಿ ಬದಿ ವ್ಯಾಪಾರಿಗಳು, ಕುಶಲಕರ್ಮಿಗಳಿಗೆ ನೇರ ಸಾಲ ಸೌಲಭ್ಯ ದೊರತೆಯುತ್ತಿಲ್ಲ. ನಿರುದ್ಯೋಗಿ ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಲು ವಾಹನ ಸಾಲ, ಐರಾವತ ಯೋಜನೆಯ ಕಾರುಗಳು, ಗಂಗಾಕಲ್ಯಾಣ ಯೋಜನೆ ಸೇರಿ ಹತ್ತು ಹಲವು ಕಾರ್ಯಕ್ರಮಗಳು ಸ್ಥಗಿತವಾಗಿವೆ. ಪರಿಣಾಮವಾಗಿ ಸಮುದಾಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದರು.