ಚಿತ್ರದುರ್ಗ: ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಅವರು ಗುರುವಾರ ದಿಡೀರ್ ಭೇಟಿ ನೀಡಿ ಪರಿಶೀಲಿಸಿದರು.
ಹೊರ ರೋಗಿ ವಿಭಾಗ (ಒಪಿಡಿ) ಬಂದ್ ಆಗಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದಲ್ಲಿ ಪ್ರಕಟವಾದ ವರದಿ ಗಮನಿಸಿದ ಶಶಿಕಲಾ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ವೈಯಕ್ತಿಕ ಸುರಕ್ಷತಾ ಸಾಧನ (ಪಿಪಿಇ ಕಿಟ್) ಧರಿಸಿ ಕೋವಿಡ್ ಆಸ್ಪತ್ರೆ ಪ್ರವೇಶಿಸಿದರು.
ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರು. ಸಮಸ್ಯೆಗಳನ್ನು ಆಲಿಸಿ, ಧೈರ್ಯ ತುಂಬಿದರು. ರೋಗಿಗಳಿಗೆ ಗುಣಮುಟ್ಟದ ಆಹಾರ ವಿತರಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ್ ಅವರಿಗೆ ಸೂಚನೆ ನೀಡಿದರು.
ವೈದ್ಯಕೀಯ ತ್ಯಾಜ್ಯದ ಅಸಮರ್ಪಕ ವಿಲೇವಾರಿಗೆ ಸಂಬಂಧಿಸಿದಂತೆ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವಂತೆ ತಾಕೀತು ಮಾಡಿದರು. ಹೊರ ರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿದ ನಾಮಫಲಕ ತೆರವುಗೊಳಿಸಿ ಸೇವೆ ಒದಗಿಸುವಂತೆ ಸೂಚನೆ ನೀಡಿದರು.