ಸಾಗರ: ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರು ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಮಂಗಳವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕನ್ನಡದ ಪರವಾಗಿ ಹೋರಾಟ ನಡೆಸಿದ ಕಾರಣಕ್ಕೆ ನಾರಾಯಣ ಗೌಡ ಅವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು ಅವರ ವಿರುದ್ಧ ಹೂಡಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೆ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಕರ್ನಾಟಕದಲ್ಲಿ ಪ್ರತಿಯೊಂದು ನಾಮಫಲಕಗಳಲ್ಲಿ ಶೇ 60ರಷ್ಟು ವಿವರಗಳು ಕನ್ನಡ ಭಾಷೆಯಲ್ಲೆ ಇರಬೇಕು ಎಂಬ ನಿಯಮವಿದ್ದರೂ ಹೆಚ್ಚಿನವರು ಅದನ್ನು ಪಾಲಿಸುತ್ತಿಲ್ಲ. ಇದು ಕನ್ನಡ ಭಾಷೆಯ ಬಗ್ಗೆ ತೋರುತ್ತಿರುವ ನಿರ್ಲಕ್ಷ್ಯ ಧೋರಣೆಯಾಗಿದೆ ಎಂದು ಪ್ರತಿಭಟನಕಾರರು ದೂರಿದರು.
ಸಾಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿನ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇಲ್ಲದಿದ್ದರೆ ಅವುಗಳನ್ನು ತೆರವುಗೊಳಿಸುವ ಕೆಲಸವನ್ನು ತಾಲ್ಲೂಕು ಆಡಳಿತ ಮಾಡಬೇಕು. ಇಲ್ಲದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರೆ ಆ ಕೆಲಸ ಮಾಡಬೇಕಾಗುತ್ತದೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು.
ರಕ್ಷಣಾ ವೇದಿಕೆಯ ಪ್ರಮುಖರಾದ ಮನೋಜ್ ಕುಗ್ವೆ, ರವೀಂದ್ರ ಸಾಗರ್, ಅಭಿಷೇಕ್, ಷಣ್ಮುಖ, ಸವೇರಾ ಫರ್ನಾಂಡಿಸ್, ಪ್ರವೀಣ್ ಸಿದ್ದಾಪುರ, ಸಚಿನ್ ಇದ್ದರು.