ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಕರಿಗೆ ಸ್ಪಂದಿಸದವರಿಗೆ ಪಾಠ ಕಲಿಸಿ

ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರಿಗೆ ಮಾಜಿ ಶಾಸಕಿ ಪೂರ್ಣಿಮಾ ಮನವಿ
Published 26 ಮೇ 2024, 3:08 IST
Last Updated 26 ಮೇ 2024, 3:08 IST
ಅಕ್ಷರ ಗಾತ್ರ

ಚಿತ್ರದುರ್ಗ: ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದೇ ಮತ್ತೊಮ್ಮೆ ಮತಯಾಚನೆ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಮನವಿ ಮಾಡಿದರು.

ಇಲ್ಲಿನ ಮದಕರಿನಾಯಕ ಶಿಕ್ಷಣ ಸಂಸ್ಥೆಯ ವಾಲ್ಮೀಕಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು.

‘18 ವರ್ಷಗಳಿಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದಾಗಿ ಅಭ್ಯರ್ಥಿಯೊಬ್ಬರು ಬೀಗುತ್ತಿದ್ದಾರೆ. ಇಷ್ಟು ವರ್ಷ ಕ್ಷೇತ್ರದ ಶಿಕ್ಷಕರಿಗೆ ಅವರ ಕೊಡುಗೆ ಏನು ಎಂಬುದನ್ನು ಪ್ರಶ್ನಿಸುವ ಅಗತ್ಯವಿದೆ. ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಅಧಿಕಾರವಧಿಯಲ್ಲಿ ಈವರೆಗೆ ಯಾವ ಕ್ರಮವನ್ನು ಅವರು ಕೈಗೊಂಡಿಲ್ಲ’ ಎಂದು ದೂರಿದರು.

‘ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುತ್ತಿದೆ. ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದೆ. ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ಬದಲಾಗಿ ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್‌) ಜಾರಿಗೊಳಿಸುವ ಕುರಿತು ಸರ್ಕಾರ ಗಂಭೀರವಾಗಿ ಆಲೋಚನೆ ಮಾಡುತ್ತಿದೆ. ಕ್ಷೇತ್ರದ ಮತದಾರರು ಹೊಸ ಅಭ್ಯರ್ಥಿಗೆ ಅವಕಾಶ ನೀಡಬೇಕು’ ಎಂದು ಕೋರಿದರು.

ಕೆಪಿಸಿಸಿ ಕಾರ್ಯದರ್ಶಿ ನೇರ್ಲಗುಂಟೆ ರಾಮಪ್ಪ, ‘ಶಿಕ್ಷಕರರಿಗೆ ಹಲವು ಸೌಲಭ್ಯಗಳನ್ನು ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣಕ್ಕೆ ಇದು ಸಾಧ್ಯವಾಗಿಲ್ಲ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್‌ಗೆ ಅರಿವಿದೆ. ಇವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಿದೆ’ ಎಂದು ಹೇಳಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಡಿ.ಎನ್‌. ಮೈಲಾರಪ್ಪ, ಮುಖಂಡರಾದ ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಮದಕರಿ ನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಂದೀಪ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT