ಮೊಳಕಾಲ್ಮುರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯು ಕೋವಿಡ್ ಪ್ರರಣಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ರೈತಸಂಘ ಹಾಗೂ ಹಸಿರುಸೇನೆ ಮತ್ತು ಎಐಕೆಎಸ್ ಸಂಘನೆಗಳುಆರೋಪಿಸಿವೆ.
ಬುಧವಾರ ಈ ಸಂಬಂಧ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ‘ರಾಜ್ಯ ಮತ್ತು ದೇಶದಲ್ಲಿ ಕೋವಿಡ್ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿ ಜನರು ಸಂಕಷ್ಟದಲ್ಲಿದ್ದಾರೆ. ಈ ಸಮಯದಲ್ಲಿ ವಿರೋಧಪಕ್ಷವಾಗಿ ಕೋವಿಡ್ ನಿಯಂತ್ರಣಕ್ಕೆ ಸಲಹೆ ನೀಡಬೇಕಾದ ಕಾಂಗ್ರೆಸ್ ಪಾದಯಾತ್ರೆ ಮೂಲಕ ವ್ಯವಸ್ಥೆಯನ್ನು ಕೆಡಿಸುತ್ತಿದೆ’ ಎಂದು ದೂರಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸುಖಾ ಸುಮ್ಮನೇ ಕಾಲಹರಣ ಮಾಡಿ ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಲ್ಲ. ಈಗ ನಿಯಮಗಳನ್ನು ಗಾಳಿಗೆ ತೂರಿ ಪಾದಯಾತ್ರೆ ನಡೆಸಿ ಸಾವಿನ ಮೇಲೆ ಸವಾರಿ ಮಾಡಲು ಮುಂದಾಗಿದೆ’ ಎಂದರು.
‘ತಾಲ್ಲೂಕು ಹಲವು ವರ್ಷಗಳಿಂದ ಸತತ ಬರಗಾಲಕ್ಕೆ ತುತ್ತಾಗಿದೆ. ಬೆಳೆ ಪರಿಹಾರ ಕೊಡಿಸುವುದಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ರೈತರಿಗೆ ನಂಬಿಸಿ ಮಂಕುಬೂದಿ ಎರಚುತ್ತಿದ್ದಾರೆ. ಇದರಿಂದ ಜನರು ಸಾಲಗಾರರಾಗಿದ್ದಾರೆ. ಬ್ಯಾಂಕ್ ಉಪಟಳಕ್ಕೆ ಗ್ರಾಮಗಳನ್ನು ಬಿಟ್ಟು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಆತ್ಮಹತ್ಯೆ ದಾರಿ ತುಳಿಯುವುದಕ್ಕೂ ಮುನ್ನ ಈ ಬಗ್ಗೆ ಗಮನಹರಿಸಬೇಕು’ ಎಂದು ಮನವಿ ಮಾಡಿದರು.