ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಪಾಲವನಹಳ್ಳಿ ಜಮೀನಿನಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ ಸ್ಥಿತಿಯಲ್ಲಿ ತೃತೀಯ ಲಿಂಗಿಯೊಬ್ಬರ ಶವ ಪತ್ತೆಯಾಗಿದೆ.
ಕೊಲೆಯಾದ ತೃತೀಯ ಲಿಂಗಿಯನ್ನು ಅಂಜಲಿ (35) ಎಂದು ಗುರುತಿಸಲಾಗಿದೆ. ಶುಕ್ರವಾರದಿಂದ ಇವರು ನಾಪತ್ತೆಯಾಗಿದ್ದರು.
ಮೂಲತಃ ಪರಶುರಾಂಪುರದ ಅಂಜಲಿ ಹಲವು ವರ್ಷಗಳಿಂದ ಚಿತ್ರದುರ್ಗದಲ್ಲಿ ನೆಲೆಸಿದ್ದರು. ಶುಕ್ರವಾರ ಮನೆಯಿಂದ ಹೊರಗೆ ಹೋದವರು ಮತ್ತೆ ಮರಳಿರಲಿಲ್ಲ. ಇದರಿಂದ ಆತಂಕಗೊಂಡ ಸ್ನೇಹಿತೆಯರು ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಶವವೊಂದು ಬಿದ್ದಿರುವುದನ್ನು ಗಮನಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿದಾಗ ಅಂಜಲಿ ಕೊಲೆಯಾಗಿದ್ದು ಖಚಿತವಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಡಿವೈಎಸ್ಪಿ ಪಾಂಡುರಂಗ ಸ್ಥಳಕ್ಕೆ ಭೇಟಿ ನೀಡಿದ್ದರು.
‘ಮನೆ ತೊರೆದು ಬದುಕು ಕಟ್ಟಿಕೊಳ್ಳುತ್ತಿರುವ ತೃತೀಯ ಲಿಂಗಿಗಳನ್ನು ಸಮಾಜ ಕೆಟ್ಟದೃಷ್ಟಿಯಿಂದ ನೋಡುತ್ತಿದೆ. ಕೊಲೆ ಮಾಡಿದ ದುಷ್ಕರ್ಮಿಗಳನ್ನು ಪತ್ತೆ ಮಾಡಬೇಕು. ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದು ಸ್ಥಳದಲ್ಲಿ ಜಮಾಯಿಸಿದ್ದ ತೃತೀಯ ಲಿಂಗಿಗಳು ಪೊಲೀಸರನ್ನು ಒತ್ತಾಯಿಸಿದರು.