ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ ನಿಯಂತ್ರಣಕ್ಕೆ ಅಧಿಕಾರಿಗಳ ನಿರುತ್ಸಾಹ

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಬೇಸರ
Last Updated 31 ಜನವರಿ 2023, 4:51 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಅಪಘಾತ ವಲಯಗಳಲ್ಲಿ ಅಪಘಾತ ತಡೆಗೆ ಯಾವುದೇ ಸೂಕ್ತ ಕ್ರಮವಹಿಸಿಲ್ಲ. ತಾತ್ಕಾಲಿಕ ಪರಿಹಾರಕ್ಕೂ ಒಂಬತ್ತು ತಿಂಗಳು ಏಕೆ ತೆಗೆದುಕೊಂಡಿದ್ದೀರಾ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ. ಅಧಿಕಾರಿಗಳನ್ನು ಪ್ರಶ್ನಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೆಎಂಐಟಿ ವೃತ್ತ, ಬಸವೇಶ್ವರ ಆಸ್ಪತ್ರೆ, ಡಾನ್‌ ಬಾಸ್ಕೊ ಶಾಲೆ ಮುಂತಾದ ಸ್ಥಳಗಳನ್ನು ಅಪಘಾತ ವಲಯ ಎಂದು ಗುರುತಿಸಲಾಗಿದೆ. ಇವುಗಳಿಗೆ ಇದುವರೆಗೂ ಪರಿಹಾರ ಕಾರ್ಯ ಕೈಗೊಳ್ಳಲು ಸಾಧ್ಯವಾಗಿಲ್ಲ. ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು. ‌

ಅಪಘಾತ ವಲಯಗಳಲ್ಲಿ ಅಪಘಾತ ನಿಯಂತ್ರಣಕ್ಕೆ ಕೆಲವೆಡೆ ತಾತ್ಕಾಲಿಕ ಹಾಗೂ ಇನ್ನು ಕೆಲವು ಕಡೆಗಳಲ್ಲಿ ಶಾಶ್ವತ ಪರಿಹಾರ ಕಾರ್ಯ ಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈ ಹಿಂದೆ ಸೂಚನೆ ನೀಡಲಾಗಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ತಮ್ಮ ಮೇಲಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸುವಲ್ಲಿಯೇ ಕಾಲಹರಣ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಜೆಎಂಐಟಿ ವೃತ್ತದ ಬಳಿ ಕಾಲೇಜು ವಿದ್ಯಾರ್ಥಿಗಳು ಹೆದ್ದಾರಿಯಲ್ಲಿ ಸಣ್ಣ ಜಾಗ ಮಾಡಿಕೊಂಡು, ಅಲ್ಲಿಂದಲೇ ರಸ್ತೆ ದಾಟುತ್ತಿದ್ದಾರೆ. ಇದು ಅಪಘಾತಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಇಲ್ಲಿ ವೃತ್ತ ಅಭಿವೃದ್ಧಿಪಡಿಸಿ ಸಿಗ್ನಲ್‌ ಲೈಟ್‌ ಅಳವಡಿಸಬೇಕಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ತಿಳಿಸಿದರು.

ಈಗಾಗಲೇ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೈಪಾಸ್ ನಿರ್ಮಿಸಿರುವುದರಿಂದ ಬಹುತೇಕ ಬೃಹತ್‌ ವಾಹನಗಳು ಬೈಪಾಸ್‌ನಲ್ಲಿ ಸಂಚರಿಸುತ್ತಿವೆ. ಹೀಗಾಗಿ ಜೆಎಂಐಟಿ ವೃತ್ತದಿಂದ ಚಳ್ಳಕೆರೆ ಗೇಟ್‌ವರೆಗೆ ನಗರದಲ್ಲಿ ಹಾದುಹೋಗಿರುವ ಹೆದ್ದಾರಿಯ ನಿರ್ವಹಣೆ ಹಾಗೂ ಪರಿಹಾರ ಕಾರ್ಯದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ರವಿತೇಜ, ಬೈಪಾಸ್‌ ನಿರ್ಮಾಣವಾಗಿರುವುದರಿಂದ ನಗರ ದಲ್ಲಿನ ರಾಷ್ಟ್ರೀಯ ಹೆದ್ದಾರಿಯನ್ನು ಡಿನೋಟಿಫೈ ಮಾಡಿ ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಲಾಗುತ್ತದೆ ಎಂದರು.

ರಸ್ತೆ ಇನ್ನೂ ಸ್ಥಳೀಯ ಸಂಸ್ಥೆಗೆ ಹಸ್ತಾಂತರವಾಗಿಲ್ಲ, ಅಲ್ಲಿಯವರೆಗೂ ಈ ಮಾರ್ಗದಲ್ಲಿನ ಅಪಘಾತ ವಲಯ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕೀತು ಮಾಡಿದರು.

ನಗರದಾದ್ಯಂತ ಒಳಚರಂಡಿ ಕಾಮಗಾರಿ (ಯುಜಿಡಿ) ಕೈಗೊಂಡಿದ್ದು, ರಸ್ತೆಗಳನ್ನು ಮೊದಲಿನ ಸ್ಥಿತಿಗೆ ತರದೆ, ಅಲ್ಲಲ್ಲಿ ಉಬ್ಬು, ತಗ್ಗುಗಳು ನಿರ್ಮಾಣವಾಗಿವೆ. ನಗರದಲ್ಲಿ ಇಂತಹ 182 ಉಬ್ಬು ತಗ್ಗುಗಳನ್ನು ಗುರುತಿಸಲಾಗಿದ್ದು, ಇದರಿಂದ ವಾಹನ ಸವಾರರು ತೊಂದರೆ ಎದುರಿಸುತ್ತಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸ್‌ ಅಧಿಕಾರಿ ರಾಜು ಸಭೆಯ ಗಮನಕ್ಕೆ ತಂದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೂಡಲೇ ನಗರದಾದ್ಯಂತ ರಸ್ತೆಗಳನ್ನು ಪರಿಶೀಲಿಸಬೇಕು. ಯುಜಿಡಿ ಕಾಮಗಾರಿಯಿಂದ ರಸ್ತೆಯಲ್ಲಿ ಆಗಿರುವ ಉಬ್ಬು ತಗ್ಗುಗಳನ್ನು ಒಂದು ತಿಂಗಳ ಒಳಗಾಗಿ ಸರಿಪಡಿಸುವಂತೆ ಸೂಚಿಸಿದರು.

ಸಭೆಗೆ ಗೈರಾದ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ನೋಟಿಸ್‌ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಸಮಿತಿ ಕಾರ್ಯದರ್ಶಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಟಿ.ಎಸ್‌.ಮಲ್ಲಿಕಾರ್ಜುನ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಮುತೇಶ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್‌ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್‌ ಇದ್ದರು.

ಅಪಘಾತಕ್ಕೆ 415 ಬಲಿ

‘ಜಿಲ್ಲೆಯಲ್ಲಿ ಹಲವು ಕಾರಣಗಳಿಂದಾಗಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. 2022ರಲ್ಲಿ 396 ತೀವ್ರ ಸ್ವರೂಪದ ಅಪಘಾತ ಸಂಭವಿಸಿದ್ದು, 415 ಮಂದಿ ಮೃತಪಟ್ಟಿದ್ದಾರೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ಸಭೆಗೆ ಮಾಹಿತಿ ನೀಡಿದರು.

‘2021ರಲ್ಲಿ 373 ತೀವ್ರ ಸ್ವರೂಪದ ಅಪಘಾತಗಳಲ್ಲಿ 398 ಜನ ಪ್ರಾಣ ಕಳೆದುಕೊಂಡಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿನ ಭರಮಸಾಗರ, ಐಮಂಗಲ, ಜವಗೊಂಡನಹಳ್ಳಿ ಬಳಿಯ ಆಸ್ಪತ್ರೆಗಳಲ್ಲಿ 108 ಆಂಬುಲೆನ್ಸ್‌ ಸೌಲಭ್ಯವಿದೆ. ಸದಾ ಲಭ್ಯವಿರುವಂತೆ ನೋಡಿಕೊಳ್ಳಬೇಕಿದೆ’ ಎಂದರು.

ಆಟೊ ನಿಲ್ದಾಣ ನಿರ್ಮಾಣ

ನಗರದಲ್ಲಿ ಒಟ್ಟು 31 ಆಟೊ ನಿಲ್ದಾಣಗಳಲ್ಲಿ 13 ಕಡೆ ಮಾತ್ರ ಬಳಕೆಯಾಗುತ್ತಿವೆ. ಸೂಕ್ತ ಸ್ಥಳ ನಿಗದಿ ಮಾಡುವಂತೆ ಆಟೊ ಚಾಲಕರು ಬೇಡಿಕೆ ಸಲ್ಲಿಸಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸ್‌ ಅಧಿಕಾರಿ ರಾಜು ಸಭೆಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ನಗರದಲ್ಲಿ ಬಸ್‌ ತಂಗುದಾಣ, ಪಾರ್ಕಿಂಗ್‌ ಹಾಗೂ ಆಟೊ ನಿಲ್ದಾಣ ಅಗತ್ಯ. ಈ ಬಗ್ಗೆ ಲೋಕೋಪಯೋಗಿ, ಪೊಲೀಸ್‌ ಹಾಗೂ ನಗರಸಭೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲಿಸಿ ಪ್ರಸ್ತಾವ ಸಲ್ಲಿಸಿ’ ಎಂದು
ಸೂಚಿಸಿದರು.

ಆಸ್ಪತ್ರೆಗಳಲ್ಲಿ ಅಪಘಾತದ ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ನೀಡಿ, ಜೀವ ಉಳಿಸುವ ಪುಣ್ಯದ ಕೆಲಸವನ್ನು ವೈದ್ಯರು, ಶುಶ್ರೂಷಕರು ಮಾಡಬೇಕು. ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ತರಬೇತಿ ನೀಡಬೇಕು.

ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT