ಚಳ್ಳಕೆರೆ: ಧರಣಿ ನಡೆಸಲು ಅವಕಾಶ ನೀಡದ ಪ್ರಾಂಶುಪಾಲರ ವಿರುದ್ಧ ನಗರದ ಸರ್ಕಾರಿ ಪದವಿ ಕಾಲೇಜು ಮುಂಭಾಗದಲ್ಲಿ ಅತಿಥಿ ಉಪನ್ಯಾಸಕರು ಬುಧವಾರ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಹೋಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಪ್ರತಿಭಟನೆಗೆ ಅನುಮತಿ ನೀಡುವಂತೆ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅತಿಥಿ ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ತಿಳಿಸಿದರು.
ಸರ್ಕಾರ ನೀಡುತ್ತಿರುವ ಅತ್ಯಂತ ಕಡಿಮೆ ಗೌರವಧನಕ್ಕೆ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ, ಅವಾಚ್ಯವಾಗಿ ನಿಂದಿಸಿ, ದೌರ್ಜನ್ಯ ನಡೆಸಲಾಗುತ್ತಿದೆ. ವಿನಾಕಾರಣ ಒತ್ತಡ ಹೇರುವ ಜತೆಗೆ ಕರ್ತವ್ಯದಿಂದ ಬಿಡುಗಡೆಗೊಳಿಸುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು.
ವಿಶೇಷ ತರಗತಿ ತೆಗೆದುಕೊಂಡು ಬೋಧಿಸುತ್ತಿದ್ದರೂ ಗೌರವ ನೀಡದೆ ಅಥಿತಿ ಉಪನ್ಯಾಸಕರನ್ನು ಕಡೆಗಣಿಸಲಾಗಿದೆ. ಸರ್ಕಾರದಿಂದ ಬಿಡುಗಡೆಯಾದ ಬಾಕಿ ಗೌರವಧನ ನೀಡಲು ಪ್ರಾಂಶುಪಾಲರು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಅಥಿತಿ ಉಪನ್ಯಾಸಕಿ ಶೋಭಾ ಆಕ್ರೋಶ ವ್ಯಕ್ತಪಡಿಸಿದರು.
ಹಲವು ಕಷ್ಟಗಳನ್ನು ನುಂಗಿಕೊಂಡು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದರೂ ವೇತನ ಸರಿಯಾಗಿ ನೀಡುತ್ತಿಲ್ಲ ಎಂದು ಅತಿಥಿ ಉಪನ್ಯಾಸಕರಾದ ಮಧು, ಅನಿಲ್ ಬೇಸರ ವ್ಯಕ್ತಪಡಿಸಿದರು.
ಉಪನ್ಯಾಸಕರಾದ ಮಹಾಂತೇಶ್, ಬ್ರಹ್ಮಾನಂದ ರೆಡ್ಡಿ, ಯರ್ರಿಸ್ವಾಮಿ, ವಲಿವುಲ್ಲಾ, ಉಪನ್ಯಾಸಕಿ ಶಿಲ್ಪಾ, ಪುಷ್ಪಾ ಇದ್ದರು.