ಚಿತ್ರದುರ್ಗ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ದಾಸ್ ಅವರ ಎಸ್ಸಿ-ಎಸ್ಟಿ ಮೀಸಲಾತಿ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಧರಣಿ ಮೇ 20ಕ್ಕೆ ನೂರು ದಿನ ಪೂರೈಸಲಿದೆ. ಅಂದು ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಎಚ್.ಜೆ. ಕೃಷ್ಣಮೂರ್ತಿ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೀಸಲಾತಿಗಾಗಿ ಸಮುದಾಯದ ಸ್ವಾಮೀಜಿ ಧರಣಿ ಕುಳಿತರೂ ಸರ್ಕಾರ ಈವರೆಗೂ ಪೂರಕವಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಮೇ 20ರಂದು ನಗರದ ಗಾಂಧಿ ವೃತ್ತದಿಂದ ಒನಕೆ ಓಬವ್ವ ವೃತ್ತದವರೆಗೂ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು’ ಎಂದರು.
ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್ ಮಾತನಾಡಿ, ‘ಇತರೆ ಸಮಾಜದ ಸ್ವಾಮೀಜಿಗಳು ಈ ರೀತಿ ಧರಣಿ ನಡೆಸಿದ್ದರೆ ಸರ್ಕಾರ ಕೂಡಲೇ ಸ್ಪಂದಿಸುತ್ತಿತ್ತು. ಕೂಡಲೇ ನ್ಯಾಯ ಒದಗಿಸದಿದ್ದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.
ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಸದಸ್ಯರಾದ ವೆಂಕಟೇಶ್, ದೀಪು, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಮುಖಂಡರಾದ ಡಿ. ಗೋಪಾಲಸ್ವಾಮಿ ನಾಯಕ, ಎಚ್. ಅಂಜಿನಪ್ಪ ಇದ್ದರು.