ಪರಶುರಾಂಪುರ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಬಕೊಚ್ಚುವ ಉತ್ತರಕುಮಾರನಂತೆ. ಅವರಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಬೈಯುವುದೇ ಕೆಲಸವಾಗಿದೆ’ ಎಂದು ಸಚಿವ ಬಿ. ಶ್ರೀರಾಮುಲು ದೂರಿದರು.
ಹೋಬಳಿಯ ಚೌಳೂರು ಗೇಟ್ನಲ್ಲಿ ನಡೆದ ಚಿತ್ರದುರ್ಗ–ದಾವಣಗೆರೆ ವಿಧಾನಪರಿಷತ್ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಎರಡು ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದು ಇದುವರೆಗೂ ಜನರ ಮುಂದೆ ಬಾರದ ರಘು ಆಚಾರ್ ಸೋಲುವ ಭೀತಿಯಿಂದ ಈ ಬಾರಿ ಹೊರಗಿನವರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಹೀಗಾಗಿ ಸ್ಥಳೀಯ ಬಿಜೆಪಿ ಆಭ್ಯರ್ಥಿ ನವೀನ್ ಅವರನ್ನು ಮತದಾರರು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.
‘ಕೇಂದ್ರದಲ್ಲಿ ಪ್ರಧಾನಿ ಮೋದಿ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ 5 ಜನ ಶಾಸಕರು ಹಾಗೂ ಕೇಂದ್ರ ಸಚಿವರಯ ಇದ್ದಾರೆ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೇನೆ. ಬಿಜೆಪಿ ಗೆಲುವಿಗೆ ಎಲ್ಲರೂ ಶ್ರಮಿಸುತ್ತಿದ್ದು, ಗೆಲ್ಲುವ ವಿಶ್ವಾಸವಿದೆ’ ಎಂದರು.
ಶಾಸಕ ತಿಪ್ಪಾರೆಡ್ಡಿ ಮಾತನಾಡಿ, ‘ಹಿರಿಯೂರು, ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕಿನಲ್ಲಿ ಬತ್ತಿ ಹೋಗಿರುವ ಕೊಳವೆಬಾವಿಗಳಲ್ಲಿ ಇಂದು ನೀರು ಬರುತ್ತಿದೆ ಎಂದರೆ ಅದಕ್ಕೆ ಕಾರಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ. ಭದ್ರಾ ಮೇಲ್ದಂಡೆ ಯೋಜನೆ ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಯೋಜನೆಯಾಗಲಿದೆ. ಇವೆಲ್ಲಾ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು’ ಎಂದರು.
ಅಭ್ಯರ್ಥಿ ಕೆ.ಎಸ್. ನವೀನ್ ಮಾತನಾಡಿ, ‘ಪರಶುರಾಂಪುರದ ಭಾಗದಲ್ಲಿ ವೇದಾವತಿ ನದಿಯಲ್ಲಿನ ಬ್ಯಾರೇಜ್ಗಳಿಗೆ ಮತ್ತು ಧರ್ಮಪುರ ಕೆರೆಗೆ ನೀರು ಹರಿಸುವ ಕೆಸವನ್ನು ಬಿಜೆಪಿ ಸರ್ಕಾರ ಮಾಡಿದೆ. ಹೀಗಾಗಿ ಮತದಾರರು ಆಶೀರ್ವದಿಸಬೇಕು’ ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮುರುಳಿ, ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ, ಮುಖಂಡರಾದ ಜಯಪಾಲಯ್ಯ, ಸೋಮಶೇಖರ ಮಂಡಿಮಠ, ಮಂಜುನಾಥ, ರಾಮದಾಸ, ವೆಂಕಟೇಶ ಇದ್ದರು.