ಅನಾದಿ ಕಾಲದ ಆಚರಣೆ: ‘ನಮ್ಮೂರಿನಲ್ಲಿ ‘ಕಂಬಳಿ ಆನೆ’ ಮೆರವಣಿಗೆ ಅನಾದಿ ಕಾಲದಿಂದಲೂ ನಡೆಯುತ್ತಿದೆ. ಹಿಂದೆ ಜೀವಂತ ಆನೆಯ ಮೇಲೆ ವೆಂಕಟೇಶ್ವರ ಸ್ವಾಮಿಯ ಮೂರ್ತಿ ಕೂರಿಸಿ ಮೆರವಣಿಗೆ ಮಾಡುತ್ತಿದ್ದರಂತೆ. ಆದರೆ ಬರಬರುತ್ತ ಆನೆಯನ್ನು ಕರೆಸುವುದು ಕಷ್ಟವಾಯಿತಂತೆ. ಆಗ ಸಂಪ್ರದಾಯ ಬಿಡಬಾರದು ಎಂದು ಆನೆಯ ಪ್ರತಿಕೃತಿಯನ್ನು ರಚಿಸಿ ಅದರ ಮೇಲೆ ದೇವರನ್ನು ಕೂರಿಸಿ ಮೆರವಣಿಗೆ ಮಾಡುವುದು ರೂಢಿಯಾಯಿತು. ಹಿಂದೆ ಕಪ್ಪು ಕಂಬಳಿ ಹೆಚ್ಚು ಸಿಗುತ್ತಿದ್ದುದರಿಂದ ಆನೆಯ ಮಾದರಿ ರಚಿಸಲು ಕಂಬಳಿಯನ್ನು ಬಳಸುತ್ತಿದ್ದರು. ಆದರೆ ಈಗ ಕಂಬಳಿ ಬಳಕೆ ಕಡಿಮೆಯಾಗಿರುವುದರಿಂದ ಕಪ್ಪು ಬಟ್ಟೆಯಿಂದ ಆನೆ ರಚಿಸುತ್ತಾರೆ’ ಎನ್ನುತ್ತಾರೆ ಗ್ರಾಮದ ರಂಗಯ್ಯ, ದಯಾನಂದ ಸ್ವಾಮಿ, ರುದ್ರಪ್ಪ, ಗುಡೇಗೌಡ್ರು ಭೈರೇಶಪ್ಪ, ಸುರೇಶ್, ಸತೀಶ್ ಹಾಗೂ ತಿಪ್ಪೇಶ್.