ಚಿತ್ರದುರ್ಗ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಿಸಿದ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಎಂಜಿನಿಯರ್ ಮೇಲೆ ಹಲ್ಲೆ ನಡೆಸಿದ ಘಟನೆ ತಾಲ್ಲೂಕಿನ ಕಸವನಹಳ್ಳಿಯಲ್ಲಿ ನಡೆದಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಕಾಯ ಎಂಜಿನಿಯರ್ ನಾಗರಾಜ್ ಹಲ್ಲೆಗೆ ಒಳಗಾಗಿರುವವರು. ಗಾಯಗೊಂಡಿರುವ ಇವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಕಸವನಹಳ್ಳಿ ಹಾಗೂ ಭೂತನಮರ ಗ್ರಾಮಗಳ ನಡುವಿನ ರಸ್ತೆಯಲ್ಲಿ ಪಿಎಂಜಿಎಸ್ವೈ ಯೋಜನೆಯಡಿ ರಸ್ತೆ ನಿರ್ಮಿಸಲಾಗಿತ್ತು. ಎರಡು ತಿಂಗಳಲ್ಲಿ ರಸ್ತೆ ಕಿತ್ತುಹೋಗಿದೆ. ಸೋಮವಾರ ಎಂಜಿನಿಯರ್ ಸ್ಥಳಕ್ಕೆ ಕರೆಸಿಕೊಂಡ ಗ್ರಾಮಸ್ಥರು ಕಾಮಗಾರಿ ಕಳಪೆಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಎಂಜಿನಿಯರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಲ್ಲೇಟು ಬಿದ್ದಿದ್ದರಿಂದ ತಲೆ, ಕೈ ಕಾಲುಗಳು ಗಾಯಗೊಂಡಿದ್ದು, ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.