ಚಿತ್ರದುರ್ಗ: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ₹ 50 ಕೋಟಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಚಿತ್ರದುರ್ಗ ಸಂಸದರು ಹಾಗೂ ಶಾಸಕರ ನೇತೃತ್ವದ ಬಿಜೆಪಿ ನಿಯೋಗಕ್ಕೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ. ಅಧಿಕೃತ ಆದೇಶ ಹೊರಡಿಸುವುದು ಮಾತ್ರ ಬಾಕಿ ಇದೆ.
ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವಂತೆ ಕೋಟೆನಾಡಿನ ಜನರು ದಶಕಗಳಿಂದ ಬೇಡಿಕೆ ಮುಂದಿಟ್ಟಿದ್ದರು. ಜಿಲ್ಲಾ ಆಸ್ಪತ್ರೆ ಸೌಲಭ್ಯಗಳು ರೋಗಿಗಳಿಗೆ ಸಾಕಾಗದಿರುವುದರಿಂದ ದಿನ ಕಳೆದಂತೆ ಈ ಬೇಡಿಕೆ ಇನ್ನಷ್ಟು ಗಟ್ಟಿ ಧ್ವನಿ ಪಡೆಯಿತು. ಹಿಂದುಳಿದ ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರಾದರೆ ವೈದ್ಯಕೀಯ ಸೌಲಭ್ಯಕ್ಕೆ ಹೊರ ಜಿಲ್ಲೆಗೆ ತೆರಳುವುದು ತಪ್ಪುತ್ತದೆ ಎಂಬುದು ಸಾರ್ವಜನಿಕರ ಪ್ರಮುಖ ವಾದವಾಗಿತ್ತು.
2013ರಲ್ಲಿ ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಲಾಗಿತ್ತು. ಜಿಲ್ಲಾ ಆಸ್ಪತ್ರೆ ಸಮೀಪದ ಕೆಳಗೋಟೆ ಸರ್ವೆ ನಂಬರ್ನಲ್ಲಿ ಭೂಮಿಯನ್ನು ಕಾಯ್ದಿರಿಸಲಾಗಿತ್ತು. ಚಿತ್ರದುರ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರಿಗೆ ಭೂಮಿ ವರ್ಗಾವಣೆಯಾಗಿತ್ತು. ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ₹ 191 ಕೋಟಿ ಅನುದಾನದ ಅಗತ್ಯವಿದೆ ಎಂದು ಅಂದಾಜು ಮಾಡಲಾಗಿತ್ತು.
ಸರ್ಕಾರ ಬದಲಾದ ಬಳಿಕ ವೈದ್ಯಕೀಯ ಕಾಲೇಜು ನನೆಗುದಿಗೆ ಬಿದ್ದಿತು. ಕಾಲೇಜು ಪ್ರಾರಂಭಿಸುವಂತೆ ಸಂಘ–ಸಂಸ್ಥೆಗಳು ಬೀದಿಗೆ ಇಳಿದವು. ರಾಜಕೀಯ ಪಕ್ಷಗಳು ಮಧ್ಯಪ್ರವೇಶಿಸಿದ್ದರಿಂದ ರಾಜಕೀಯ ಸ್ವರೂಪ ಪಡೆಯಿತು. ಆ ಬಳಿಕ ಚಿತ್ರದುರ್ಗದಲ್ಲಿ ನಡೆದ ಬಹುತೇಕ ಎಲ್ಲ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಪ್ರಣಾಳಿಕೆಯಲ್ಲಿ ಸ್ಥಾನ ಪಡೆದಿತ್ತು. ಬಿಜೆಪಿ ಕೂಡ ಚುನಾವಣೆಗೂ ಮೊದಲು ವೈದ್ಯಕೀಯ ಕಾಲೇಜು ತರುವ ಆಶ್ವಾಸನೆ ನೀಡಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಸಂಸದ ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಕೆ.ಪೂರ್ಣಿಮಾ, ಗೂಳಿಹಟ್ಟಿ ಡಿ.ಶೇಖರ್ ನೇತೃತ್ವದ ಬಿಜೆಪಿ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗುರುವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್, ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ಸೇರಿ ಹಲವು ಬಿಜೆಪಿ ನಾಯಕರೂ ನಿಯೋಗದಲ್ಲಿದ್ದರು.
‘ಚಿತ್ರದುರ್ಗ ಜಿಲ್ಲೆಯ ಜನರು ವೈದ್ಯಕೀಯ ಸೇವೆ ಪಡೆಯಲು ಹೊರ ಜಿಲ್ಲೆಗೆ ಅಲೆಯುವುದನ್ನು ತಪ್ಪಿಸಲು ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ. ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲವಾಗಲಿದೆ’ ಎಂದು ಮುಖ್ಯಮಂತ್ರಿಯನ್ನು ನಿಯೋಗ ಮನವಿ ಮಾಡಿತು. ಚರ್ಚೆಯ ಬಳಿಕ ಮುಖ್ಯಮಂತ್ರಿ ₹ 50 ಕೋಟಿ ಅನುದಾನಕ್ಕೆ ಒಪ್ಪಿಗೆ ಸೂಚಿಸಿದರು ಎಂದು ಮೂಲಗಳು ಮಾಹಿತಿ ನೀಡಿವೆ.
ಸಚಿವ ಸುಧಾಕರ್ ಭೇಟಿ ಇಂದು
ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಿರುವ ಸ್ಥಳ ವೀಕ್ಷಣೆಗೆ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಅವರು ಶುಕ್ರವಾರ ಚಿತ್ರದುರ್ಗಕ್ಕೆ ಭೇಟಿ ನೀಡಲಿದ್ದಾರೆ.
‘ಸಚಿವರು ಶುಕ್ರವಾರ ಮಧ್ಯಾಹ್ನ 12ಕ್ಕೆ ಜಿಲ್ಲೆಗೆ ಆಗಮಿಸಲಿದ್ದಾರೆ. ಅಧಿಕಾರಿಗಳ ತಂಡವೂ ಜೊತೆಗೆ ಬರಲಿದೆ. ಕಾಲೇಜು ನಿರ್ಮಾಣಕ್ಕೆ ಅಗತ್ಯ ಸಿದ್ಧತೆಗಳು ಆರಂಭವಾಗಲಿವೆ’ ಎಂದು ಸಂಸದ ಎ.ನಾರಾಯಣಸ್ವಾಮಿ ಮಾಹಿತಿ ನೀಡಿದ್ದಾರೆ.
ಹೋರಾಟ ಸಮಿತಿ ಸಂತಸ
ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಅನುದಾನ ಘೋಷಣೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಚಿತ್ರದುರ್ಗ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಸಂತಸ ವ್ಯಕ್ತಪಡಿಸಿದೆ.
‘ಕಾಲೇಜು ಮಂಜೂರಾಗಿದ್ದರೂ ಹಣ ಬಿಡುಗಡೆಯಲ್ಲಿ ಉಂಟಾದ ವಿಳಂಭದಿಂದ ಆತಂಕ ಎದುರಾಗಿತ್ತು. ಸಂಘ–ಸಂಸ್ಥೆಗಳ ಹೋರಾಟದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಅನುದಾನ ಬಿಡುಗಡೆ ಮಾಡಿದ್ದು ಸ್ವಾಗತಾರ್ಹ. ಸುಸಜ್ಜಿತ ಕಟ್ಟಡ ನಿರ್ಮಾಣವಾಗಬೇಕು’ ಎಂದು ಸಮಿತಿ ಅಧ್ಯಕ್ಷ ಟಿ.ಷಫಿವುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***
ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕೆಂಬ ದಶಕಗಳ ಕನಸು ನನಸಾಗುತ್ತಿದೆ. ಈ ಭಾಗದ ಜನರಿಗೆ ಇನ್ನಷ್ಟು ಉತ್ತಮ ಹಾಗೂ ತ್ವರಿತ ಆರೋಗ್ಯ ಸೇವೆ ದೊರಕಲಿದೆ.
–ಬಿ.ಶ್ರೀರಾಮುಲು,ಜಿಲ್ಲಾ ಉಸ್ತುವಾರಿ ಸಚಿವ
ನಿಯೋಗದ ಮನವಿಯನ್ನು ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ವೀಕರಿಸಿದರು. ಮರುಕ್ಷಣವೇ ₹ 50 ಕೋಟಿ ಅನುದಾನ ಮಂಜೂರು ಮಾಡಿದರು. ಇದು ಸರ್ಕಾರದ ಬಹುದೊಡ್ಡ ಕೊಡುಗೆ.
–ಎ.ನಾರಾಯಣಸ್ವಾಮಿ,ಸಂಸದ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.