ಹೊಸದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೃಹತ್ ಮೆರವಣಿಗೆ ನಡೆಸಿದರು.
ಇಲ್ಲಿನ ಹಳೆಯ ಬಸ್ ನಿಲ್ದಾಣದಿಂದ ಹೊರಟ ನೂರಾರು ಜನರು ಮುಖ್ಯರಸ್ತೆ ಮಾರ್ಗವಾಗಿ ಟಿ.ಬಿ. ವೃತ್ತದವರೆಗೂ ಮೆರವಣಿಗೆ ನಡೆಸಿದರು. ಸೋನೆ ಮಳೆಯಲ್ಲೂ ಸಾಗಿದ ಮೆರವಣಿಗೆಯ ಉದ್ದಕ್ಕೂ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಗೂಳಿಹಟ್ಟಿ ಡಿ.ಶೇಖರ್ ಪರ ಜೈಕಾರ ಕೂಗಿದರು.
ಗೂಳಿಹಟ್ಟಿ ಶೇಖರ್ ಅವರು 2008ರ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆಗ ಅವರು ಯಾವುದೇ ಫಲಾಪೇಕ್ಷೆ ಇಲ್ಲದೇ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಆಡಳಿತಕ್ಕೆ ಬರಲು ಬೆಂಬಲ ನೀಡಿದ್ದರು. ಆಗ ಅವರಿಗೆ ಜವಳಿ, ಯುವಜನ ಹಾಗೂ ಕ್ರೀಡಾ ಸಚಿವ ಸ್ಥಾನ ನೀಡಿದ್ದರಿಂದ ರಾಜ್ಯದಲ್ಲಿ ಉತ್ತಮ ಕೆಲಸ ಮಾಡಿದ್ದರು. ಆದರೆ, ಆಗಲೂ ಅರ್ಧಕ್ಕೆ ಸಂಪುಟದಿಂದ ಅವರನ್ನು ಕೈಬಿಡಲಾಗಿತ್ತು ಎಂದು ದೂರಿದರು.
ಹಲವು ಕಾರ್ಯಕ್ರಮಗಳ ಮೂಲಕ ತಾಲ್ಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಇಂತಹ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಅಭಿಮಾನಿಗಳು ಎಚ್ಚರಿಕೆ ನೀಡಿದರು.