ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಮಠಕ್ಕೆ ಅನುದಾನ: ಮಾಹಿತಿಗೆ ಹೈಕೋರ್ಟ್‌ ಸೂಚನೆ

Last Updated 31 ಜನವರಿ 2023, 4:23 IST
ಅಕ್ಷರ ಗಾತ್ರ

ಬೆಂಗಳೂರು: ‘ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ (ಎಸ್‌ಜೆಎಂ) ವತಿಯಿಂದ ನಿರ್ಮಿಸಲಾಗುತ್ತಿರುವ ಅತಿ ಎತ್ತರದ ಬಸವೇಶ್ವರ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ರಾಜ್ಯ ಸರ್ಕಾರ ನೀಡಿರುವ ಕೋಟ್ಯಂತರ ರೂಪಾಯಿ ಅನುದಾನದ ಮಾಹಿತಿ ಒದಗಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಮುಂದುವರಿಸಿತು.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, ‘ಮುರುಘಾಮಠಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಆದರೆ, ದುರದೃಷ್ಟವಶಾತ್‌ ಈಗಿನ ಪೀಠಾಧಿಪತಿ ಮುರುಘಾ ಶರಣರು ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಮಠಕ್ಕೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿ ಹಾಗೂ ವಿದ್ಯಾಸಂಸ್ಥೆಗಳ ದೈನಂದಿನ ಆಡಳಿತಕ್ಕೆ ವ್ಯತ್ಯಯ ಉಂಟಾಗಬಾರದು ಎಂಬ ಏಕೈಕ ಕಾರಣಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ’ ಎಂದು ಸರ್ಕಾರದ ನಿಲುವನ್ನು ಸಮರ್ಥಿಸಿದರು.

‘ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಅತಿ ಎತ್ತರದ ಬಸವ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ಸರ್ಕಾರವು ಕಾಲಕಾಲಕ್ಕೆ ಕೋಟ್ಯಂತರ ರೂಪಾಯಿಗಳ ಬೃಹತ್‌ ಅನುದಾನ ನೀಡುತ್ತಾ ಬಂದಿದೆ. ಇದಕ್ಕೆ ತಾಜಾ ಉದಾಹರಣೆಯಾಗಿ 2022ರ ಸೆಪ್ಟೆಂಬರ್ 15ರಂದು ಸರ್ಕಾರ ₹ 10 ಕೋಟಿ ನೀಡಿದೆ. ಇದಕ್ಕೂ ಮುನ್ನ ಸಾಕಷ್ಟು ಆರ್ಥಿಕ ನೆರವು ಒದಗಿಸಲಾಗಿದೆ. ಈ ಕುರಿತ ಎಲ್ಲ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಲಾಗುವುದು’ ಎಂದರು.

‘ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದ ವಿಚಾರದಲ್ಲಿ ಸರ್ಕಾರ ನೀಡಿರುವ ಆರ್ಥಿಕ ನೆರವಿನ ಅಂಶಗಳೂ ಅಡಗಿವೆ. ಆಡಳಿತಾಧಿಕಾರಿ ನೇಮಕಕ್ಕೂ ಮುನ್ನ ಮುಖ್ಯಮಂತ್ರಿಗಳು ಸ್ವತಃ ನೂರು ಬಾರಿ ಯೋಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಇದರಲ್ಲಿ ಮಠದ ಆಸ್ತಿ ಸಂರಕ್ಷಣೆ ಮತ್ತು ಭಕ್ತರ ಹಿತಾಸಕ್ತಿ ಕಾಪಾಡುವ ಉದ್ದೇಶ ಅಡಗಿದೆ. ಮಠದ ಜೊತೆಗೆ ಸಂಘರ್ಷಕ್ಕಿಳಿಯುವ ಅಥವಾ ವ್ಯಾಜ್ಯ ಮಾಡುವ ಧೋರಣೆಯಿಲ್ಲ’ ಎಂದು ಸ್ಪಷ್ಟಪಡಿಸಿದರು.

ಆಡಳಿತಾಧಿಕಾರಿ ಪರ ಹಿರಿಯ ವಕೀಲ ಗಂಗಾಧರ ಗುರುಮಠ ಅವರಿಗೆ ಫೆಬ್ರುವರಿ 2ರಂದು ವಾದ ಮಂಡಿಸಲು ಅವಕಾಶ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ರಿಟ್‌ ಅರ್ಜಿ: ‘ಮುರುಘಾ ಶರಣರ ವಿರುದ್ಧ ತನಿಖಾಧಿಕಾರಿಗಳು, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ–1988ರ ಕಲಂ 8 (2)ರ ಅನ್ವಯ ವಿಚಾರಣೆ ಮುಗಿಯುವತನಕ ಶರಣರು ಅಧಿಕಾರ ಚಲಾಯಿಸುವಂತಿಲ್ಲ’ ಎಂದು ಸೆಷನ್ಸ್ ಕೋರ್ಟ್‌ ನೀಡಿರುವ ದಾಖಲೆಯನ್ನು ಪ್ರಶ್ನಿಸಿ ರಿಟ್‌ ಅರ್ಜಿ ಸಲ್ಲಿಸಲಾಗಿದೆ’ ಎಂದು ಅರ್ಜಿದಾರರ ಪರ ವಕೀಲ ಸಂದೀಪ್‌ ಎಸ್‌.ಪಾಟೀಲ್‌ ಇದೇ ವೇಳೆ ನ್ಯಾಯಪೀಠಕ್ಕೆ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT