ಮೊಳಕಾಲ್ಮುರು: ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಮೇ 20ರಂದು ತಾಲ್ಲೂಕಿನ ಹಾನಗಲ್ ಕ್ರಾಸ್ನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆನಡೆಸಲಾಗುವುದು ಎಂದು ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಹೋರಾಟ ಸಮಿತಿ ಸಂಚಾಲಕ ಬಿ. ವಿಜಯ್ ಹೇಳಿದರು.
ಕನ್ನಡ ಭವನದಲ್ಲಿ ಸೋಮವಾರ ನಡೆದ ಜನಾಂಗದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು ಬೆಂಗಳೂರಿನಲ್ಲಿ ನಡೆಸುತ್ತಿರುವ ಹೋರಾಟ 100 ದಿನ ಪೂರ್ಣವಾಗುತ್ತಿರುವ ಕಾರಣ ಅವರಿಗೆ ನೈತಿಕಬೆಂಬಲ ನೀಡಲು ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಶೈಕ್ಷಣಿಕ ಹಾಗೂ ಉದ್ಯೋಗ ಮೀಸಲಾತಿಗೆ ಸ್ವಾಮೀಜಿ ಹೋರಾಟ ನಡೆಸುತ್ತಿದ್ದಾರೆ. ಮುಂದಿನ ಪೀಳಿಗೆಗೆ ಮೀಸಲಾತಿ ಅತ್ಯಗತ್ಯ. ಹೆಚ್ಚಿನ ಸಂಖ್ಯೆಯಲ್ಲಿ ಜನಾಂಗದವರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಮೀಸಲಾತಿ ಪ್ರಮಾಣ ಹೆಚ್ಚಳವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಜನಸಂಖ್ಯೆ ಆಧಾರಿತ ಮೀಸಲಾತಿಯಿಂದ ಈಜನಾಂಗಗಳು ವಂಚಿತವಾಗಿದೆ. ಸಂವಿಧಾನ ಬದ್ಧ ಹಕ್ಕು ಪಡೆಯಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ವಾಲ್ಮೀಕಿ ವೇದಿಕೆ ತಾಲ್ಲೂಕು ಅಧ್ಯಕ್ಷ ಭೀಮಣ್ಣ, ಕೃಷ್ಣ ನಾಗಸಮದ್ರ, ಎನ್. ಶ್ರೀರಾಮುಲು, ಗೋವಿಂದ, ಮಾರಣ್ಣ, ಕೃಷ್ಣ ಇದ್ದರು.